ತಿರುಪತಿ ದರ್ಶನ ಮುಗಿಸಿ ಬೆಂಗಳೂರಿಗೆ ವಾಪಸ್ ಬರುತ್ತಿದ್ದ ಕುಟುಂಬಕ್ಕೆ ಭೀಕರ ಅಪಘಾತ; ನಾಲ್ವರು ಸ್ಥಳದಲ್ಲೇ ಸಾವು
ಕೋಲಾರ: ಡಿವೈಡರ್ಗೆ ಕಾರು ಡಿಕ್ಕಿಯಾದ ಪರಿಣಾಮ ನಾಲ್ವರು ಸಾವನ್ನಪ್ಪಿರುವ ಭೀಕರ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ತಾಲ್ಲೂಕಿನ ದೊಡ್ಡಕಾರಿ ಬಳಿ ನಡೆದಿದೆ.
ಅಪಘಾತದಲ್ಲಿ ಬೆಂಗಳೂರಿನ ವಿದ್ಯಾರಣ್ಯಪುರ ಮೂಲದ ಶಾರದಮ್ಮ (70), ದೀಕ್ಷಿತ (25), ದೇವೇಂದ್ರ ಕುಮಾರ್ (41) ಹಾಗೂ ಜಿಷ್ಣು (13) ಮೃತಪಟ್ಟಿದ್ದಾರೆ.
ಕುಟುಂಬಸ್ಥರು ಒಟ್ಟಾಗಿ ತಿರುಪತಿಗೆ ತೆರಳಿ ತಿಮ್ಮಪ್ಪನ ದರ್ಶನ ಪಡೆದು ಬೆಂಗಳೂರಿಗೆ ವಾಪಸ್ ಬರುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಮಾರ್ಗಮಧ್ಯೆ ಟೊಯೋಟಾ ರಿಯಾನ್ ಕಾರು ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಅಪಘಾತದಲ್ಲಿ ವಿಕಾಸ್, ನೀತು ಹಾಗೂ ಆದ್ವಿಕ ಎಂಬ ಮೂವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಬಂಗಾರಪೇಟೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆ ಸಂಬಂಧ ಬೇತಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.



