ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಆ.30ರವರೆಗೆ ಯಾವುದೇ ಪೂಜಾ ಸೇವೆಗಳಿಗೆ ಅವಕಾಶವಿಲ್ಲ ಎಂದು ದೇವಳದ ಪ್ರಕಟಣೆ ತಿಳಿಸಿದೆ.
ಕೇರಳ ರಾಜ್ಯದೊಂದಿಗೆ ಗಡಿ ಹಂಚಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಜಿಲ್ಲಾಧಿಕಾರಿಗಳ ಆದೇಶದಂತೆ ರಾಜ್ಯದ ನಂಬರ್ ವನ್ ಆದಾಯದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆ.30 ರವರೆಗೆ ಯಾವುದೇ ಸೇವೆಗಳು ನಡೆಯುವುದಿಲ್ಲ. ಕೇವಲ ಕುಕ್ಕೆ ಸುಬ್ರಹ್ಮಣ್ಯ ದೇವರ ದರ್ಶನಕ್ಕೆ ಮಾತ್ರ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ. ಅಲ್ಲದೆ ತೀರ್ಥ ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ಇರುವುದಿಲ್ಲ. ವಾರಾಂತ್ಯದ ದಿನಗಳಾದ ಶನಿವಾರ ಮತ್ತು ಭಾನುವಾರ ದೇವರ ದರ್ಶನಕ್ಕೂ ಅವಕಾಶ ನಿರ್ಬಂಧಿಸಲಾಗಿದೆ ಎಂದು ದೇವಳದ ಪ್ರಕಟಣೆಯಲ್ಲಿ ಹೇಳಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಸ್ತುತ ಕೊರೊನಾ ಪ್ರಕರಣಗಳು ಅಧಿಕವಾಗಿರುವುದರಿಂದ ಭಕ್ತರ ಆರೋಗ್ಯ ಹಿತದೃಷ್ಠಿಯಿಂದ ಜಿಲ್ಲಾಧಿಕಾರಿಗಳ ಆದೇಶದಂತೆ ರಾಜ್ಯದ ಪ್ರಸಿದ್ಧ ನಾಗ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಆ.30ರವರೆಗೂ ಸರ್ಪಸಂಸ್ಕಾರ, ಆಶ್ಲೇಷ ಬಲಿ, ನಾಗಪ್ರತಿಷ್ಠೆ, ತುಲಾಭಾರ, ಚವಲ, ಪಂಚಾಮೃತ ಮಹಾಭಿಷೇಕ, ಪ್ರಾರ್ಥನೆ ಸೇರಿದಂತೆ ಎಲ್ಲ ಸೇವೆಗಳನ್ನು ನಿಷೇಧಿಸಲಾಗಿದೆ.

ವಾರದ ದಿನಗಳಲ್ಲಿ ಬೆಳಗ್ಗೆ 7.00ರಿಂದ ಮಧ್ಯಾಹ್ನ 11.30 ತನಕ, ಮಧ್ಯಾಹ್ನ 12.15-1.30 ಹಾಗೂ 2.30ರಿಂದ ರಿಂದ ಸಂಜೆ 7.00 ತನಕ ಭಕ್ತರು ಸುಬ್ರಹ್ಮಣ್ಯ ದೇವರ ದರ್ಶನ ಮಾಡಬಹುದು.
ಭಕ್ತರ ದರ್ಶನದ ಸಂದರ್ಭದಲ್ಲಿ ಮಂಗಳಾರತಿ ಸೇವೆ ಸಲ್ಲಿಸಲು ಮಾತ್ರ ಅವಕಾಶ ಕಲ್ಪಿಸಲಾಗಿದೆ. ವಾರಾಂತ್ಯ ದಿನಗಳನ್ನು ಹೊರತುಪಡಿಸಿ ಇತರ ದಿನಗಳಲ್ಲಿ ಕ್ಷೇತ್ರದ ವಸತಿ ಗೃಹಗಳಲ್ಲಿ ತಂಗಲು ಅವಕಾಶವಿದೆ..






