ರಾಯಚೂರು, ಯಾದಗಿರಿ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಮಕ್ಕಳು, ಹೆಣ್ಣುಮಕ್ಕಳ ಅಪೌಷ್ಟಿಕತೆ ನಿವಾರಣೆ, ಆರೋಗ್ಯ ಮತ್ತು ಶಿಕ್ಷಣದಲ್ಲಿ ಇತರ ಜಿಲ್ಲೆಗಳಿಗೆ ಸಮಾನವಾಗಿಸಲು ಮತ್ತು ರಾಷ್ಟ್ರೀಯ ಸರಾಸರಿಯ ಮಟ್ಟಕ್ಕೆ ತರಲು, ವಿಶೇಷ ಯೋಜನೆ ರೂಪಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ವಿಕಾಸಸೌಧದಲ್ಲಿ ಮುಖ್ಯ ಕಾರ್ಯದರ್ಶಿಗಳ ಆಹ್ವಾನದ ಮೇರೆಗೆ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಕೆಡಿಪಿ ಸಭೆ ನಡೆಸಿದ ನಂತರ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. “ಮಹಿಳಾ ಮತ್ತು ಮಕ್ಕಳ ವಿಚಾರದಲ್ಲಿ ರಾಯಚೂರು, ಯಾದಗಿರಿ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಅಪೌಷ್ಟಿಕತೆಯಿಂದ ಬಳಲುತ್ತಿದ್ದು ಹಾಗೂ ಶಿಕ್ಷಣದಲ್ಲಿಯೂ ಹಿಂದುಳಿದಿದ್ದಾರೆ. ಈ ಮೂರು ಮಹತ್ವಾಕಾಂಕ್ಷಿ ಜಿಲ್ಲೆಗಳಲ್ಲಿ ಹೆಣ್ಣುಮಕ್ಕಳು ಮತ್ತು ಮಕ್ಕಳ ಆರೋಗ್ಯ ಮತ್ತು ಶಿಕ್ಷಣದಲ್ಲಿ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಿನ ಮಟ್ಟಕ್ಕೆ ಒಯ್ಯಲು ವಿಶೇಷ ಯೋಜನೆ ರೂಪಿಸಲಾಗುವುದು” ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
“ಮಂಗಳವಾರ ನಡೆದ ಸಭೆಯಲ್ಲಿ ಹಲವಾರು ಇಲಾಖೆಗಳ ಪ್ರಗತಿ ಪರಿಶೀಲನೆ ಮಾಡಲಾಗಿದೆ. ಎರಡನೇ ತ್ರೈಮಾಸಿಕ ಅಂತ್ಯವಾಗುತ್ತಿದೆ. ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಮಾಡಲಾಯಿತು. ಬಿಡುಗಡೆಯಾದ ಅನುದಾನಕ್ಕೆ ಎದುರು ಆಗಿರುವ ವೆಚ್ಚಗಳ ಬಗ್ಗೆ ಪರಿಶೀಲಿಸಲಾಯಿತು. ಮುಂದಿನ ತ್ರೈಮಾಸಿಕದ ಒಳಗೆ, ನೀಡಲಾದ ಗುರಿ ಸಾಧನೆಯಾಗಬೇಕು” ಎಂದು ಅಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ಸೂಚಿಸಿದ್ದಾರೆ.
ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಕೇಂದ್ರದ ಪಾಲು ಬಿಡುಗಡೆಯಾದ ಕೂಡಲೇ ರಾಜ್ಯದ ಪಾಲನ್ನೂ ಬಿಡುಗಡೆ ಮಾಡಿ, ಜನರಿಗೆ ಅಗತ್ಯವಿರುವ ಕಾರ್ಯಕ್ರಮಗಳನ್ನು ಜಾರಿಗೊಳಿಸಬೇಕು. ಕೇಂದ್ರ ಅನುದಾನ ಸದ್ಬಳಕೆಗೆ ಹೆಚ್ಚಿನ ಒತ್ತು ಕೊಡಬೇಕೆಂದು ಸೂಚಿಸಲಾಯಿತು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.