ಅಪ್ಪು ನಿಧನದ ನಂತರ ಮೌನಮುರಿದ ಅಶ್ವಿನಿ ಪುನೀತ್ ರಾಜ್ ಕುಮಾರ್

1
34

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗಾಗಿ ಇಂದು ಚಿತ್ರರಂಗದಿಂದ ‘ಪುನೀತ ನಮನ’ ಕಾರ್ಯಕ್ರಮದ ಮೂಲಕ ಗೌರವ ಸಲ್ಲಿಸಲಾಗಿದೆ. 20 ದಿನಗಳಾದರೂ ಅಪ್ಪು ಅಗಲಿಕೆಯ ನೋವು ಕಡಿಮೆಯಾಗಿಲ್ಲ. ಕಣ್ಣೀರು ನಿಂತಿಲ್ಲ. ಅಪ್ಪು ನಿಧನದ ನಂತರ ಇದೇ ಮೊದಲ ಬಾರಿಗೆ ಅಶ್ವಿನಿ ಪುನೀತ್ ರಾಜಕುಮಾರ್ ಮೌನ ಮುರಿದಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪತ್ರವನ್ನು ಪೋಸ್ಟ್ ಮಾಡಿದ್ದಾರೆ.

‘ಶ್ರೀ ಪುನೀತ್ ರಾಜಕುಮಾರ್ ಅವರ ಅಗಲಿಕೆ ನಮಗಷ್ಟೇ ಅಲ್ಲದೆ ಇಡೀ ರಾಜ್ಯಕ್ಕೆ ಆಘಾತಕಾರಿ ವಿಷಯವಾಗಿದೆ. ನಿಷ್ಕಲ್ಮಶ ಪ್ರೀತಿಯಿಂದ, ಅಕ್ಕರೆಯ ಅಭಿಮಾನದಿಂದ ಅವರನ್ನು ಪವರ್ ಸ್ಟಾರ್ ಆಗಿ ರೂಪಿಸಿದ ನಿಮ್ಮೆಲ್ಲರಿಗೆ ಅವರ ವಿದಾಯ ತಂದಿತ್ತ ದುಃಖ ಎಷ್ಟಿರಬಹುದೆಂದು ಊಹಿಸಲು ಸಾಧ್ಯವಿಲ್ಲ. ಆದರೂ, ಇಂತಹ ಸಂದರ್ಭದಲ್ಲಿ ನೀವುಗಳು ಎಲ್ಲಿಯೂ ಸಂಯಮ ಕಳೆದುಕೊಳ್ಳದೆ, ಅಹಿತಕರ ಘಟನೆಗಳು ನಡೆಯಲು ಬಿಡದೆ ಅವರಿಗೊಂದು ಅತ್ಯಂತ ಗೌರವಯುತ ಬೀಳ್ಕೊಡುಗೆ ನೀಡುವಲ್ಲಿ ಸಹಕರಿಸಿದ್ದೀರಿ.

ಸಿನಿಮಾ ಪ್ರೇಮಿಗಳಷ್ಟೇ ಅಲ್ಲದೆ, ವಯೋಮಾನದ ಮಿತಿಯಿಲ್ಲದೆ ದೇಶ-ವಿದೇಶಗಳಿಂದ ಕೋಟ್ಯಂತರ ಜನರು ಸಂತಾಪ ಸೂಚಿಸುವುದನ್ನು ಕಂಡಾಗ ಮನಸ್ಸು ಭಾರವಾಗುತ್ತದೆ. ನಿಮ್ಮ ಪ್ರೀತಿಯ ಅಪ್ಪು ಅವರು ಹಾಕಿಕೊಟ್ಟ ದಾರಿಯಲ್ಲಿ ನಡೆಯುತ್ತ ಸಾವಿರಾರು ಸಂಖ್ಯೆಯಲ್ಲಿ ನೇತ್ರದಾನಕ್ಕೆ ನೋಂದಣಿ ಮಾಡಿಸುವುದನ್ನು ನೋಡಿದಾಗ ಕಣ್ತುಂಬಿ ಬರುತ್ತದೆ. ಅವರನ್ನು ಆದರ್ಶವಾಗಿಟ್ಟುಕೊಂಡು ನೀವುಗಳು ಮಾಡುವ ಸತ್ಕಾರ್ಯಗಳಲ್ಲಿ ಅವರ ನೆನಪುಗಳು ನಿಮ್ಮಲ್ಲಿ ಮೂಡಿಸುವ ಉತ್ಸಾಹದಲ್ಲಿ ಅವರೆಂದಿಗೂ ಜೀವಂತವಾಗಿರುತ್ತಾರೆ. ವಿಶ್ವದಾದ್ಯಂತ ನಮ್ಮ ಶೋಕವನ್ನು ಹಂಚಿಕೊಂಡು ಬೆಂಬಲಕ್ಕೆ ನಿಂತ ಎಲ್ಲ ಸಹೃದಯ ಅಭಿಮಾನಿ ದೇವರುಗಳು ಮತ್ತು ಸಾರ್ವಜನಿಕರಿಗೆ ನಮ್ಮ ಇಡೀ ಕುಟುಂಬದ ಪರವಾಗಿ ಹೃತ್ಪೂರ್ವಕ ಧನ್ಯವಾದಗಳು’ ಎಂದು ಅಶ್ವಿನಿ ಪುನೀತ್ ರಾಜಕುಮಾರ್ ಪೋಸ್ಟ್ ಹಾಕಿದ್ದಾರೆ.

 

1 COMMENT

LEAVE A REPLY

Please enter your comment!
Please enter your name here