ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣದಲ್ಲಿ ಎಸ್ಐಟಿ ಕಸ್ಟಡಿ ಇಂದಿಗೆ ಅಂತ್ಯ ಆಗಿದೆ. ಪ್ರಜ್ವಲ್ ರೇವಣ್ಣ ವಿರುದ್ಧ ಪ್ರಬಲ ಸಾಕ್ಷಿಗಳ ಸಂಗ್ರಹಕ್ಕೆ ಎಸ್ಐಟಿ ಅಧಿಕಾರಿಗಳು ಮುಂದಾಗಿದ್ದು, ಈವರೆಗೆ ಆರೋಪಿ ವಿರುದ್ಧದ ಎರಡು ಪ್ರಕರಣಗಳ ತನಿಖೆಯನ್ನು ಅಧಿಕಾರಿಗಳು ಮುಗಿಸಿದ್ದಾರೆ. ಹೊಳೆನರಸೀಪುರ ಟೌನ್ ಠಾಣೆಯಲ್ಲಿ ದಾಖಲಾದ ಲೈಂಗಿಕ ದೌರ್ಜನ್ಯ, ಅತ್ಯಾಚಾರ ಪ್ರಕರಣ ಹಾಗೂ ಸಿಐಡಿಯಲ್ಲಿ ದಾಖಲಾದ ಅತ್ಯಾಚಾರ ಪ್ರಕರಣದ ತನಿಖೆ ಬಹುತೇಕ ಪೂರ್ಣಗೊಂಡಿದೆ.
ಎಸ್ಐಟಿ ತನಿಖೆ ಮುಗಿದ ಹಿನ್ನೆಲೆ ಇಂದು ಪ್ರಜ್ವಲ್ ರೇವಣ್ಣ ಅವರನ್ನು ಕೋರ್ಟ್ಗೆ ಹಾಜರುಪಡಿಸಲಾಗುವುದು. ಸಿಐಡಿಯಲ್ಲಿ ದಾಖಲಾಗಿರುವ ಅತ್ಯಾಚಾರ ಪ್ರಕರಣ ಮತ್ತೆ ಕಸ್ಟಡಿಗೆ ಪಡೆಯಲು ಎಸ್ಐಟಿ ತಯಾರಿ ನಡೆಸಿದೆ. ಕಸ್ಟಡಿಗೆ ಪಡೆಯಲು ಕೋರ್ಟ್ಗೆ ಎಸ್ಐಟಿ ಮನವಿ ಮಾಡಲಿದೆ. ಬಾಡಿ ವಾರೆಂಟ್ ಮೇಲೆ ಮತ್ತೆ ಪ್ರಜ್ವಲ್ ರೇವಣ್ಣರನ್ನು ಕಸ್ಟಡಿಗೆ ಪಡೆಯಲು ಎಸ್ಐಟಿ ಮುಂದಾಗಿದೆ.