ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ: ಸತೀಶ್ ಸೈಲ್ ಸೇರಿದಂತೆ ಎಲ್ಲಾ ಆರೋಪಿಗಳಿಗೂ ಜಾಮೀನು ಮಂಜೂರು
ಬೆಂಗಳೂರು: ಬೇಲೇಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಕಾರವಾರದ ಶಾಸಕ ಸತೀಶ್ ಸೈಲ್ʼಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಹೌದು ಕಳೆದ ಅಕ್ಟೋಬರ್ 26ರಂದು ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರಿಗೆ ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ 7 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿತ್ತು. ಈ ತೀರ್ಪನ್ನು ಪ್ರಶ್ನಿಸಿ ಶಾಸಕ ಸತೀಶ್ ಸೈಲ್ ಅವರು ಹೈಕೋರ್ಟ್ ಮೊರೆ ಹೋಗಿದ್ದರು. ಇಂದು ಶಾಸಕ ಸತೀಶ್ ಸೈಲ್ ಸೇರಿ ಎಲ್ಲಾ ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಇನ್ನೂ ದಂಡದ ಮೊತ್ತದ ಶೇಕಡ 25% ರಷ್ಟು ಕಟ್ಟಲು ಹೈಕೋರ್ಟ್ ಆದೇಶದಲ್ಲಿ ತಿಳಿಸಿದೆ. ಇದರ ಜೊತೆಗೆ ಸೆಷನ್ ಕೋರ್ಟ್ನ ಆದೇಶವನ್ನು ಹೈಕೋರ್ಟ್ ಅಮಾನತು ಮಾಡಿದೆ. ಸೆಷನ್ಸ್ ಕೋರ್ಟ್ ಶಿಕ್ಷೆ ನೀಡಿದ್ದ 6 ಪ್ರಕರಣಗಳ ತೀರ್ಪನ್ನು ಹೈಕೋರ್ಟ್ ಅಮಾನತು ಮಾಡಿದೆ. ಸತೀಶ್ ಸೈಲ್ ಜೊತೆಗೆ ಎಲ್ಲಾ 7 ಮಂದಿ ಆರೋಪಿಗಳಿಗೂ ಜಾಮೀನು ನೀಡಿ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.