ನೀರಾವರಿ ವಿದ್ಯುತ್ ಬಿಲ್ ಬಾಕಿ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ!
ತುಮಕೂರು: ತ್ರಿವಿಧ ದಾಸೋಹಕ್ಕೆ ಹೆಸರುವಾಸಿಯಾಗಿರುವ ತುಮಕೂರಿನ ಶ್ರೀ ಸಿದ್ದಗಂಗಾ ಮಠಕ್ಕೆ ಸರ್ಕಾರಿ ನೀರಾವರಿ ಯೋಜನೆಗೆ ಕೆಐಎಡಿಬಿ ಬಳಸಿದ ಬರೊಬ್ಬರಿ 70,31,438 ರೂ. ವಿದ್ಯುತ್ ಬಿಲ್ನ್ನು ಸಿದ್ದಗಂಗಾ ಮಠ ಭರಿಸುವಂತೆ ಕೆಐಎಡಿಬಿ ಪತ್ರ ಬರೆದಿದೆ. ಮಂಡಳಿಯ ಆರ್ಥಿಕ ಪರಿಸ್ಥಿತಿಯು ಸುಸ್ಥಿತಿಯಲ್ಲಿ ಇಲ್ಲದಿರುವುದರಿಂದ ಈ ವಿದ್ಯುತ್ ಬಿಲ್ ಅನ್ನು ಭರಿಸುವಂತೆ ಕೋರಲಾಗಿದೆ ಎಂದು ಪತ್ರದಲ್ಲಿ ಒಕ್ಕಣೆ ಬರೆಯಲಾಗಿದೆ.
ಸಿದ್ದಗಂಗಾ ಮಠದ ಸನಿಹದಲ್ಲೇ ಇರುವ ದೇವರಾಯಪಟ್ಟಣ ಕೆರೆಗೆ ಕೆಐಎಡಿಬಿ ಪೈಪ್ಲೈನ್ ಮೂಲಕ ಹೊನ್ನೆನಹಳ್ಳಿಯಿಂದ ಪ್ರಾಯೋಗಿಕವಾಗಿ ನೀರು ಹರಿಸಿದೆ. ಈ ಯೋಜನೆ ಪರಿಪೂರ್ಣವಾಗಿ ಜಾರಿಯಾದರೆ ಸಿದ್ದಗಂಗಾ ಮಠ ಸೇರಿದಂತೆ ದೇವರಾಯಪಟ್ಟಣ,
ಮಾದನಾಯಕನ ಪಾಳ್ಯ, ಕುಂದೂರು ಗ್ರಾಮಕ್ಕೆ ನೀರು ಪೂರೈಕೆ ಆಗಲಿದೆ. ಇಲ್ಲಿವರೆಗೆ ಪ್ರಾಯೋಗಿಕವಾಗಿ ಅಷ್ಟೇ ನೀರು ಹರಿಸಲಾಗಿದೆ. ಗ್ರಾಮಗಳಿಗೆ ವಿತರಣೆ ಆಗುತ್ತಿಲ್ಲ. ಇದಕ್ಕೆ ವೆಚ್ಚವಾದ ವಿದ್ಯುತ್ ಬಿಲ್ನ್ನು ಸಿದ್ದಗಂಗಾ ಮಠ ಪಾವತಿಸಬೇಕು ಎಂದು ಕೆಐಎಡಿಬಿ ಬರೆದಿರುವ ಪತ್ರ ಈಗ ವಿವಾದಕ್ಕೆ ಕಾರಣವಾಗಿದೆ. ಇನ್ನು ಕೆಐಎಡಿಬಿಯಿಂದ ಮಠಕ್ಕೆ ಕೆಲ ತಿಂಗಳುಗಳ ಹಿಂದೆ ಬರೆಯಲಾದ ಪತ್ರ ಇದಾಗಿದೆ. ಆದರೆ, ಸದ್ಯ ವೈರಲ್ ಆಗಿದ್ದು, ಮಠದ ಸ್ವಾಮೀಜಿಗಳು ನಾವು ಪಾವತಿ ಮಾಡುವುದಿಲ್ಲ ಎಂದು ಹೇಳಿದ್ದಾರೆ.