ಸಚಿವ ಜಮೀರ್ ಆಪ್ತ ಕಾರ್ಯದರ್ಶಿ ಸರ್ಫರಾಜ್ ಖಾನ್ʼಗೆ ಲೋಕಾಯುಕ್ತ ಶಾಕ್..!
ಬೆಂಗಳೂರು: ಸಚಿವ ಜಮೀರ್ ಅಹ್ಮದ್ ಖಾನ್ ಅವರ ಆಪ್ತ ಕಾರ್ಯದರ್ಶಿ ಸರ್ದಾರ್ ಸರ್ಫರಾಜ್ ಖಾನ್ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಭಾರೀ ಕಾರ್ಯಾಚರಣೆ ನಡೆಸಿದ್ದಾರೆ. ಬುಧವಾರ ಬೆಳಿಗ್ಗೆ ಏಕಕಾಲಕ್ಕೆ ಬೆಂಗಳೂರಿನ ಸೇರಿದಂತೆ ಒಟ್ಟು 10 ಸ್ಥಳಗಳಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಪರಿಶೀಲನೆ ಕೈಗೊಂಡಿದ್ದಾರೆ.
ಲೋಕಾಯುಕ್ತ ಅಧಿಕಾರಿಗಳು ಬೆಂಗಳೂರಿನ ಹಲಸೂರು ಪ್ರದೇಶದಲ್ಲಿರುವ ನಿವಾಸ ಸೇರಿದಂತೆ ಸರ್ಫರಾಜ್ ಖಾನ್ ಅವರಿಗೆ ಸಂಬಂಧಿಸಿದ ಒಟ್ಟು 7 ಮನೆಗಳ ಮೇಲೆ ದಾಳಿ ನಡೆಸಿದ್ದಾರೆ. ಇದರ ಜೊತೆಗೆ ಕೊಡಗು ಜಿಲ್ಲೆಯ ಎರಡು ಕಾಫಿ ಎಸ್ಟೇಟ್ಗಳು ಹಾಗೂ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆಯಲ್ಲಿರುವ ಒಂದು ರೆಸಾರ್ಟ್ ಮೇಲೂ ಏಕಕಾಲಕ್ಕೆ ಶೋಧ ನಡೆಸಲಾಗಿದೆ.
ಸರ್ದಾರ್ ಸರ್ಫರಾಜ್ ಖಾನ್ ಅವರು ಪ್ರಸ್ತುತ ವಸತಿ ಇಲಾಖೆಗೆ ನಿಯೋಜನೆಗೊಂಡಿರುವ ಅಧಿಕಾರಿಯಾಗಿದ್ದು, ಅವರ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಸಂಬಂಧ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಸುಮಾರು 50ಕ್ಕೂ ಹೆಚ್ಚು ಲೋಕಾಯುಕ್ತ ಅಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದಾರೆ.






