ಮೈಸೂರು, ಬಾಗಲಕೋಟೆ ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ ಇ-ಮೇಲ್, ತೀವ್ರ ತಪಾಸಣೆ
ಮೈಸೂರು/ಬಾಗಲಕೋಟೆ: ಕಳೆದ ತಿಂಗಳಲ್ಲಿ ಕೋಲಾರ, ಗದಗ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಹುಸಿ ಬಾಂಬ್ ಬೆದರಿಕೆ ಇ-ಮೇಲ್ಗಳು ಆತಂಕ ಸೃಷ್ಟಿಸಿದ್ದ ಬೆನ್ನಲ್ಲೇ, ಇದೀಗ ಮತ್ತೊಮ್ಮೆ ಇಂತಹದ್ದೇ ಘಟನೆ ಬೆಳಕಿಗೆ ಬಂದಿದೆ. ಮೈಸೂರಿನ ಹಳೆ ಕೋರ್ಟ್ ಹಾಗೂ ಬಾಗಲಕೋಟೆ ಜಿಲ್ಲಾ ನ್ಯಾಯಾಲಯಕ್ಕೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಭದ್ರತಾ ಸಿಬ್ಬಂದಿ ತೀವ್ರ ತಪಾಸಣೆ ನಡೆಸಿದ್ದಾರೆ.
ಮೈಸೂರಿನಲ್ಲಿ ಮಧ್ಯಾಹ್ನ 1.55ರ ಸುಮಾರಿಗೆ ಮೂರು ಆರ್ಡಿಎಕ್ಸ್ ಬಾಂಬ್ ಇಟ್ಟಿರುವುದಾಗಿ ಹಾಗೂ ಆತ್ಮಹತ್ಯಾ ದಾಳಿ ನಡೆಸುವುದಾಗಿ ಇ-ಮೇಲ್ನಲ್ಲಿ ಬೆದರಿಕೆ ಹಾಕಲಾಗಿತ್ತು. ಜೊತೆಗೆ ನ್ಯಾಯಾಧೀಶರನ್ನು ತಕ್ಷಣ ಸ್ಥಳಾಂತರಿಸುವಂತೆ ಸಂದೇಶದಲ್ಲಿ ಎಚ್ಚರಿಕೆ ನೀಡಲಾಗಿತ್ತು. ಮಾಹಿತಿ ತಿಳಿದ ತಕ್ಷಣ ನ್ಯಾಯಾಧೀಶರು, ವಕೀಲರು ಹಾಗೂ ಕಕ್ಷಿದಾರರನ್ನು ಕೋರ್ಟ್ ಆವರಣದಿಂದ ಹೊರಗೆ ಕರೆದೊಯ್ಯಲಾಗಿದ್ದು, ಬಾಂಬ್ ನಿಷ್ಕ್ರಿಯ ದಳ ತಂಡ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿತು.
ಇನ್ನೊಂದೆಡೆ, ಬಾಗಲಕೋಟೆ ಜಿಲ್ಲಾ ನ್ಯಾಯಾಲಯಕ್ಕೂ ಮಧ್ಯಾಹ್ನ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಜಿಲ್ಲಾ ನ್ಯಾಯಾಲಯದ ಪ್ರಮುಖ ಸ್ಥಳಗಳಲ್ಲಿ ಬಾಂಬ್ ಇಟ್ಟಿದ್ದು, ಮಧ್ಯಾಹ್ನದ ಊಟದ ಅವಧಿಯಲ್ಲಿ ಸ್ಫೋಟ ನಡೆಸುವುದಾಗಿ ಎಚ್ಚರಿಕೆ ನೀಡಲಾಗಿತ್ತು. ಇದರಿಂದ ನ್ಯಾಯವಾದಿಗಳು, ಕಕ್ಷಿದಾರರು, ನೌಕರರು ಹಾಗೂ ಸಾರ್ವಜನಿಕರು ಭಯಭೀತರಾಗಿ ಕೋರ್ಟ್ ಆವರಣದಿಂದ ಹೊರಬಂದಿದ್ದಾರೆ.
ಪೊಲೀಸ್, ಜಿಲ್ಲಾಡಳಿತ ಹಾಗೂ ಬಾಂಬ್ ನಿಷ್ಕ್ರಿಯ ದಳದ ತಂಡಗಳು ಸ್ಥಳಕ್ಕೆ ತೆರಳಿ ನ್ಯಾಯಾಲಯ ಕಟ್ಟಡ ಮತ್ತು ಆವರಣದ ಸಂಪೂರ್ಣ ತಪಾಸಣೆ ನಡೆಸುತ್ತಿವೆ.






