ಸಕಲ ಸರ್ಕಾರಿ ಗೌರವದೊಂದಿಗೆ ಅಜಿತ್ ಪವಾರ್ ಅಂತ್ಯಕ್ರಿಯೆ; ಪ್ರಧಾನಿ, ಅಮಿತ್ ಶಾ ಭಾಗಿ
ಮಹಾರಾಷ್ಟ್ರ: ವಿಮಾನ ದುರಂತದಲ್ಲಿ ಸಾವನ್ನಪ್ಪಿದ ಎನ್ಸಿಪಿ ನಾಯಕ ಹಾಗೂ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಅಂತ್ಯಕ್ರಿಯೆ ಇಂದು ಪುಣೆ ಜಿಲ್ಲೆಯ ಬಾರಾಮತಿಯಲ್ಲಿ ನಡೆಯಲಿದೆ. ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಲಿರುವ ಈ ಅಂತ್ಯಕ್ರಿಯೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ಗಣ್ಯ ನಾಯಕರು ಭಾಗವಹಿಸಲಿದ್ದಾರೆ ಎಂದು ಎನ್ಸಿಪಿ ಮೂಲಗಳು ಮಾಹಿತಿ ನೀಡಿವೆ.
ಬಾರಾಮತಿ ತಾಲೂಕಿನ ವಿದ್ಯಾ ಪ್ರತಿಷ್ಠಾನದ ಕ್ರೀಡಾಂಗಣದಲ್ಲಿ ಬೆಳಗ್ಗೆ ಸುಮಾರು 11 ಗಂಟೆಗೆ ಅಂತ್ಯಕ್ರಿಯೆ ನೆರವೇರಲಿದೆ. ಬುಧವಾರ ಬೆಳಗ್ಗೆ ಪುಣೆಯಿಂದ ಸುಮಾರು 100 ಕಿಲೋಮೀಟರ್ ದೂರದಲ್ಲಿರುವ ಬಾರಾಮತಿ ವಾಯುನೆಲೆಯ ಸಮೀಪ ಚಾರ್ಟರ್ಡ್ ಲಿಯರ್ಜೆಟ್ ವಿಮಾನ ಅಪಘಾತಕ್ಕೀಡಾಗಿದ್ದು, ಈ ದುರಂತದಲ್ಲಿ ಅಜಿತ್ ಪವಾರ್ ಸೇರಿದಂತೆ ಐವರು ಅಸುನೀಗಿದ್ದರು. ಅಪಘಾತದಲ್ಲಿ ಇಬ್ಬರು ಪೈಲಟ್ಗಳು, ಒಬ್ಬ ವಿಮಾನ ಸಿಬ್ಬಂದಿ ಹಾಗೂ ಒಬ್ಬ ವೈಯಕ್ತಿಕ ಭದ್ರತಾ ಅಧಿಕಾರಿ ಮೃತಪಟ್ಟಿದ್ದಾರೆ.
ಗುರುವಾರ ಬೆಳಗ್ಗೆ ಅಜಿತ್ ಪವಾರ್ ಅವರ ಪಾರ್ಥಿವ ಶರೀರವನ್ನು ಬಾರಾಮತಿಯ ಪುಣ್ಯಶ್ಲೋಕ್ ಅಹಲ್ಯಾದೇವಿ ಆಸ್ಪತ್ರೆಗೆಂದೇ ಅವರ ಸ್ವಗ್ರಾಮ ಕಟೇವಾಡಿಗೆ ಕೊಂಡೊಯ್ಯಲಾಯಿತು. ಬೆಳಗ್ಗೆ 9 ಗಂಟೆಯಿಂದ ಅಂತಿಮ ವಿಧಿವಿಧಾನಗಳ ಕಾರ್ಯ ಆರಂಭವಾಗಿದೆ.
ಈ ನಡುವೆ, ಶಿವಸೇನೆ (ಯುಬಿಟಿ) ನಾಯಕ ಉದ್ಧವ್ ಠಾಕ್ರೆ ಮತ್ತು ಅವರ ಪುತ್ರ ಆದಿತ್ಯ ಠಾಕ್ರೆ ಅವರು ಬಾರಾಮತಿಯಲ್ಲಿರುವ ಪವಾರ್ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಬುಧವಾರವೇ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಸ್ಥರೊಂದಿಗೆ ಮಾತುಕತೆ ನಡೆಸಿದ್ದರು.
ವಿಮಾನ ದುರಂತ ಸಂಬಂಧ ಪೊಲೀಸರು ಅಪಘಾತ ಸಾವಿನ ವರದಿ (ಎಡಿಆರ್) ದಾಖಲಿಸಿಕೊಂಡಿದ್ದಾರೆ. ಪವಾರ್ ಹಾಗೂ ಇತರರು ಪ್ರಯಾಣಿಸುತ್ತಿದ್ದ ವಿಮಾನ ಬಾರಾಮತಿ ರನ್ವೇಯಿಂದ ಸುಮಾರು 200 ಮೀಟರ್ ದೂರದಲ್ಲಿ ಪತನಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಿಯಮದಂತೆ ಈ ಎಡಿಆರ್ ಪ್ರಕರಣವನ್ನು ಮಹಾರಾಷ್ಟ್ರ ಅಪರಾಧ ತನಿಖಾ ಇಲಾಖೆ (ಸಿಐಡಿ)ಗೆ ಹಸ್ತಾಂತರಿಸಲಾಗುತ್ತದೆ. ವಿಮಾನ ಅಪಘಾತ ತನಿಖಾ ಬ್ಯೂರೋ (ಎಎಐಬಿ) ನೀಡುವ ತಾಂತ್ರಿಕ ವರದಿಯ ಆಧಾರದಲ್ಲಿ ಸಿಐಡಿ ತನಿಖೆ ನಡೆಸಲಿದೆ. ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯದ ಅಧೀನದಲ್ಲಿರುವ ಎಎಐಬಿ ಈಗಾಗಲೇ ತನಿಖೆ ಆರಂಭಿಸಿದೆ.
ಪ್ರಭಾವಿ ಸಾರ್ವಜನಿಕ ಪ್ರತಿನಿಧಿ ಅಥವಾ ಪ್ರಮುಖ ವ್ಯಕ್ತಿ ಅಪಘಾತದಲ್ಲಿ ಸಾವನ್ನಪ್ಪಿದ ಪ್ರಕರಣಗಳಲ್ಲಿ ಸಿಐಡಿ ತನಿಖೆ ನಡೆಸುವುದು ಪ್ರಕ್ರಿಯೆಯ ಭಾಗವಾಗಿದೆ ಎಂದು ಸಿಐಡಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.






