ಯೋಜನೆ ಮತ್ತು ಸಾಂಖಿತ ಇಲಾಖೆ ಸಚಿವ ಡಿ ಸುಧಾಕರ್ ಅವರ ಆರೋಗ್ಯ ವಿಚಾರದಲ್ಲಿ ರಾಜ್ಯ ರಾಜಕೀಯದಲ್ಲಿ ಆತಂಕ ಮನೆ ಮಾಡಿದೆ. ಯಾಕೆಂದರೆ ಡಿ ಸುಧಾಕರ್ ಶ್ವಾಸಕೋಶ ಸೋಂಕಿನಿಂದ ಬಳಲುತ್ತಿದ್ದಾರೆ. ಅವರ ಆರೋಗ್ಯ ಗಂಭೀರವಾಗಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.
ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸುಧಾಕರ್ ಅವರನ್ನು ನಾಲ್ಕು ದಿನಗಳ ಹಿಂದೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಕಿಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಈ ಹಿನ್ನೆಲೆ ಇಂದು (ಏಪ್ರಿಲ್ 25) ಮುಖ್ಯಮಂತ್ರಿ ಸಿದ್ಧರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ವೈದ್ಯರ ಜೊತೆ ಚರ್ಚೆ ಮಾಡಿದ್ದಾರೆ. ಸುಧಾಕರ್ ಆರೋಗ್ಯ ವಿಚಾರಿಸಿ ಮಾಧ್ಯಮಗಳಿಗೆ ಪ್ರತಿಕ್ರಿಯೆಯನ್ನು ಕೂಡ ನೀಡಿದ್ದಾರೆ.
ಈ ಕುರಿತು ಮಾತನಾಡಿರುವ ಸಿಎಂ ಸಿದ್ದರಾಮಯ್ಯ ಡಿ.ಸುಧಾಕರ್ಗೆ ಇನ್ನೂ ಪ್ರಜ್ಞೆ ಬಂದಿಲ್ಲ ಎಂದು ಹೇಳಿದ್ದಾರೆ. ಶ್ವಾಸಕೋಶ ಕಸಿ ಮಾಡಬೇಕಾದರೆ ಪ್ರಜ್ಞೆ ಇರಬೇಕು ಎಂದು ಹೇಳಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಸದ್ಯ ಡಿ.ಸುಧಾಕರ್ಗೆ ಪ್ರಜ್ಞೆ ಬಂದಮೇಲೆ ವೈದ್ಯರು ಮುಂದಿನ ನಿರ್ಧಾರ ಮಾಡಲಿದ್ದಾರೆ ಎಂದು ಹೇಳಿದ್ಧಾರೆ.
ವೆಂಟಿಲೇಷನ್ನಲ್ಲಿ ಬೇರೆ ಎಲ್ಲಾ ಆರ್ಗನ್ಸ್ ಸ್ಟೇಬಲ್ ಆಗಿವೆ. ಆದರೆ ಪ್ರಜ್ಞೆ ಮಾತ್ರ ಬಂದಿಲ್ಲ ಎಂದು ಹೇಳಿರುವ ಸಿದ್ದರಾಮಯ್ಯ ನಾಳೆ (ಏಪ್ರಿಲ್ 26) ಕಿಮ್ಸ್ ಆಸ್ಪತ್ರೆಯ ವೈದ್ಯರು ಸಿಟಿ ಸ್ಕ್ಯಾನ್ ಮಾಡಲಿದ್ದಾರೆ, ಸಿಟಿ ಸ್ಕ್ಯಾನ್ ನಂತರ ಅವರ ಆರೋಗ್ಯದ ಕುರಿತು ಹೆಚ್ಚಿನ ಮಾಹಿತಿ ಸಿಗಲಿದೆ ಎಂದು ಹೇಳಿದ್ದಾರೆ.
ಇದೇ ಸಮಯದಲ್ಲಿ ಡಿ ಸುಧಾಕರ್ ಅವರ ಕುಟುಂಬಸ್ಥರನ್ನು ಕೂಡ ಭೇಟಿಯಾಗಿ ಮಾತನಾಡಿರುವ ಸಿದ್ದರಾಮಯ್ಯ, ಕುಟುಂಬಸ್ಥರಿಗೆ ಧೈರ್ಯ ತುಂಬಿದ್ದಾರೆ. ಆರೋಗ್ಯ ಸ್ಥಿರವಾಗಿದ್ದು, ಶೀಘ್ರದಲ್ಲೇ ಚೇತರಿಸಿಕೊಳ್ಳುವ ಭರವಸೆ ವ್ಯಕ್ತಪಡಿಸಿದ್ದಾರೆ. ಸಚಿವ ಜಮೀರ್ ಅಹಮ್ಮದ್ ಖಾನ್, ಮಾಜಿ ಸಚಿವ ಗೂಳಿಹಟ್ಟಿ ಶೇಖರ್ ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಯಲ್ಲಿದ್ದರು. ಡಿ ಸುಧಾಕರ್ ಅವರ ಆರೋಗ್ಯವನ್ನು ವಿಚಾರಿಸಿದರು.



