ಶಿಕ್ಷಕರ ನೇಮಕಾತಿ ಪ್ರಕ್ರಿಯೆ 4–5 ತಿಂಗಳಲ್ಲಿ ಪೂರ್ಣ: ಸಚಿವ ಎಸ್. ಮಧು ಬಂಗಾರಪ್ಪ ಭರವಸೆ
ಶಿವಮೊಗ್ಗ: ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ಮುಂದಿನ ನಾಲ್ಕು ರಿಂದ ಐದು ತಿಂಗಳೊಳಗೆ ಪೂರ್ಣಗೊಳಿಸಲಾಗುವುದು ಎಂದು ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ತಿಳಿಸಿದ್ದಾರೆ.
ಶಿವಮೊಗ್ಗದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಒಳ ಮೀಸಲಾತಿ ಘೋಷಣೆಯ ನಂತರ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದ ಮೊದಲ ಸಭೆಯನ್ನು ಇತ್ತೀಚೆಗೆ ನಡೆಸಲಾಗಿದೆ ಎಂದು ಹೇಳಿದರು. ಬಳಿಕ ರಜೆಗಳ ಹಿನ್ನೆಲೆ ಕೆಲಸ ತಾತ್ಕಾಲಿಕವಾಗಿ ನಿಂತಿದ್ದರೂ, ಇದೀಗ ಪ್ರಕ್ರಿಯೆ ಮತ್ತೆ ವೇಗ ಪಡೆದುಕೊಂಡಿದೆ. ಶಿಕ್ಷಕರ ನೇಮಕಾತಿಗೆ ಅಗತ್ಯವಾದ ಸಿಇಟಿ ಪರೀಕ್ಷೆಯನ್ನು ಶೀಘ್ರದಲ್ಲೇ ನಡೆಸಲಾಗುವುದು ಎಂದರು.
ಕಳೆದ ವರ್ಷದಲ್ಲೇ ನೇಮಕಾತಿಯನ್ನು ಆರು ತಿಂಗಳೊಳಗೆ ಪೂರ್ಣಗೊಳಿಸುವ ಉದ್ದೇಶ ಇತ್ತು. ಆದರೆ ಒಳ ಮೀಸಲಾತಿ ವಿಚಾರದ ಹಿನ್ನೆಲೆಯಲ್ಲಿ ವಿಳಂಬ ಉಂಟಾಯಿತು. ಈಗ ಸಮಸ್ಯೆ ಬಗೆಹರಿದಿರುವುದರಿಂದ ನಾಲ್ಕು-ಐದು ತಿಂಗಳೊಳಗೆ ಪ್ರಕ್ರಿಯೆ ಪೂರ್ಣಗೊಳಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.
ಇದೇ ವೇಳೆ, “ಜೂನ್ ಅಥವಾ ಜುಲೈ ವೇಳೆಗೆ ನೇಮಕಾತಿ ಪೂರ್ಣಗೊಳ್ಳಲಿದೆ ಎಂದು ನಿರೀಕ್ಷಿಸಿದ್ದೆವು. ಆದರೆ ಕೆಲ ತಾಂತ್ರಿಕ ಅಡಚಣೆಗಳಿಂದ ಅದು ಸಾಧ್ಯವಾಗಲಿಲ್ಲ. ಕಡಿಮೆ ಅವಧಿಯಲ್ಲಿ ಅದ್ಭುತ ಮಾಡಲು ಸಾಧ್ಯವಿಲ್ಲ, ಆದರೂ ಸಾಧ್ಯವಾದಷ್ಟು ಬೇಗ ನೇಮಕಾತಿ ಪೂರ್ಣಗೊಳಿಸುತ್ತೇವೆ” ಎಂದು ಹೇಳಿದರು.
ಶಿಕ್ಷಣ ಪಡೆದ ಅಭ್ಯರ್ಥಿಗಳ ಕಷ್ಟವನ್ನು ತಾನು ಅರಿತಿದ್ದೇನೆ ಎಂದು ಹೇಳಿದ ಸಚಿವರು, ತಮ್ಮ ಇಲಾಖೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನೇಮಕಾತಿ ನಡೆಸುವ ಅಗತ್ಯವಿದೆ ಎಂದು ಒತ್ತಿ ಹೇಳಿದರು. ಹಣದ ಕೊರತೆ ಕುರಿತು ಟೀಕಿಸಿದ ಕೆಲವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.



