ಹಠಾತ್ ಕುಸಿದು ಸಾವನ್ನಪ್ಪಿದ ಟೆಕ್ಕಿ ಯುವತಿ: ಮೆದುಳಿನ ರಕ್ತಸ್ರಾವದಿಂದ ನಿಧನ
ಹಾಸನ: ಜಿಲ್ಲೆಯ ಬೇಲೂರು ತಾಲೂಕಿನ ಬಂಡಿಲಕ್ಕನಕೊಪ್ಪಲು ಗ್ರಾಮದಲ್ಲಿ 25 ವರ್ಷದ ಸಾಫ್ಟ್ವೇರ್ ಇಂಜಿನಿಯರ್ ಯುವತಿ ಹಠಾತ್ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೆದುಳಿನಲ್ಲಿ ತೀವ್ರ ರಕ್ತಸ್ರಾವವಾಗಿದ್ದರಿಂದ ಕೋಮಾಗೆ ಜಾರಿದ ಶ್ವೇತಾ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.ಮೃತ ಶ್ವೇತಾ ಗಂಗಾಧರ್ ಮತ್ತು ಸರೋಜ ದಂಪತಿಯ ಪುತ್ರಿಯಾಗಿದ್ದು, ಕಳೆದ ಮೂರು ವರ್ಷಗಳಿಂದ ಹಾಸನದ ಮ್ಯಾಗ್ನಾ ಸಾಫ್ಟ್ ಸಂಸ್ಥೆಯಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಏಪ್ರಿಲ್ 25ರ ಸಂಜೆ ಮನೆಯಲ್ಲಿ ಇದ್ದಾಗ ಏಕಾಏಕಿ ಕುಸಿದು ಬಿದ್ದಿದ್ದು, ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತು.ಆಸ್ಪತ್ರೆಗೆ ತಲುಪುವ ವೇಳೆಗೆ ಶ್ವೇತಾ ಕೋಮಾಗೆ ಜಾರಿದ್ದರು. ವೈದ್ಯಕೀಯ ಪರೀಕ್ಷೆಯಲ್ಲಿ ಮೆದುಳಿನಲ್ಲಿ ತೀವ್ರ ರಕ್ತಸ್ರಾವವಾಗಿರುವುದು ದೃಢಪಟ್ಟಿತು. ಚಿಕಿತ್ಸೆ ನೀಡಿದರೂ ಫಲಕಾರಿಯಾಗದೆ, ನಂತರ ಮೆದುಳು ಸಂಪೂರ್ಣ ನಿಷ್ಕ್ರಿಯಗೊಂಡ ಹಿನ್ನೆಲೆಯಲ್ಲಿ ಅವರು ಮೃತಪಟ್ಟಿದ್ದಾರೆ.ಮಗಳ ಸಾವಿನ ದುಃಖದ ನಡುವೆಯೂ ಪೋಷಕರು ಅಂಗಾಂಗ ದಾನ ಮಾಡಲು ಮುಂದಾಗಿದ್ದರು. ಆದರೆ ಆರೋಗ್ಯ ಸ್ಥಿತಿಯ ಕಾರಣದಿಂದ ಅಂಗಾಂಗ ದಾನ ಪ್ರಕ್ರಿಯೆ ಸಾಧ್ಯವಾಗಲಿಲ್ಲ ಎಂದು ತಿಳಿದುಬಂದಿದೆ.ಇಂದು ಬಂಡಿಲಕ್ಕನಕೊಪ್ಪಲು ಗ್ರಾಮದಲ್ಲಿ ಶ್ವೇತಾ ಅಂತ್ಯಕ್ರಿಯೆ ನಡೆಯಲಿದೆ. ಹಠಾತ್ ಸಂಭವಿಸಿದ ಈ ದುರ್ಘಟನೆ ಕುಟುಂಬಸ್ಥರು ಹಾಗೂ ಗ್ರಾಮಸ್ಥರಲ್ಲಿ ಆಘಾತ ಮೂಡಿಸಿದ್ದು, ಯುವತಿಯ ಸಾವಿಗೆ ಮ್ಯಾಗ್ನಾ ಸಾಫ್ಟ್ ಸಂಸ್ಥೆಯ ಸಹೋದ್ಯೋಗಿಗಳು ಕಂಬನಿ ಮಿಡಿದಿದ್ದಾರೆ.



