ಸಿಎಂ ಸಿದ್ದರಾಮಯ್ಯ ಯಾವುದೇ ನಿರ್ಧಾರಕ್ಕೂ ಸಿದ್ಧ: ಹೈಕಮಾಂಡ್ ತೀರ್ಮಾನಕ್ಕೆ ಬದ್ಧತೆ ಎಂದ ರಾಜಣ್ಣ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರ ಮುಂದುವರಿಸುವುದಕ್ಕೂ, ಅಗತ್ಯವಿದ್ದರೆ ಪದತ್ಯಾಗ ಮಾಡುವುದಕ್ಕೂ ಮಾನಸಿಕವಾಗಿ ಸಿದ್ಧರಾಗಿದ್ದಾರೆ ಎಂದು ಮಾಜಿ ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ.ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ರಾಜಕೀಯದಲ್ಲಿರುವ ಗೊಂದಲವನ್ನು ಕಾಂಗ್ರೆಸ್ ಹೈಕಮಾಂಡ್ ತಕ್ಷಣ ಬಗೆಹರಿಸಬೇಕು ಎಂದು ಒತ್ತಾಯಿಸಿದರು. ಗೊಂದಲ ಮುಂದುವರಿಯುವುದು ರಾಜ್ಯದ ಹಿತಕ್ಕೆ ಅನುಕೂಲಕರವಲ್ಲ. ಹೀಗಾಗಿ ಹೈಕಮಾಂಡ್ ಸ್ಪಷ್ಟ ನಿರ್ಧಾರ ಕೈಗೊಳ್ಳಬೇಕು ಎಂದು ಹೇಳಿದರು.ಹೈಕಮಾಂಡ್ ಯಾವ ನಿರ್ಧಾರ ತೆಗೆದುಕೊಳ್ಳುತ್ತದೆಯೋ ಅದಕ್ಕೆ ಸಿದ್ದರಾಮಯ್ಯ ಸಂಪೂರ್ಣ ಬದ್ಧರಾಗಿದ್ದಾರೆ. ಇದು ಆತುರದಲ್ಲಿ ಕೈಗೊಳ್ಳುವ ತೀರ್ಮಾನವಲ್ಲ. ಪಕ್ಷದ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಅವರು ಯಾವುದೇ ನಿರ್ಧಾರಕ್ಕೂ ಸಿದ್ಧರಾಗಿದ್ದಾರೆ ಎಂದು ರಾಜಣ್ಣ ಸ್ಪಷ್ಟಪಡಿಸಿದರು.ಇದೇ ವೇಳೆ, ಸಿಎಂ ಜೊತೆ ನಡೆದ ಸಭೆಯಲ್ಲೂ ಸಿದ್ದರಾಮಯ್ಯ ಅವರು ಮುಕ್ತ ಮನಸ್ಸಿನಿಂದ ಪ್ರತಿಕ್ರಿಯಿಸಿದ್ದಾರೆ. ರಾಹುಲ್ ಗಾಂಧಿ ನೀಡುವ ಸೂಚನೆಗಳನ್ನು ಪಾಲಿಸುವುದಾಗಿ ಅವರು ಹೇಳಿದ್ದಾರೆ. ಅವರ ನಿರ್ಧಾರಕ್ಕೆ ಎಲ್ಲರ ಸಹಕಾರ ಅಗತ್ಯವಿದೆ ಎಂಬ ಅಭಿಪ್ರಾಯವನ್ನು ಸಿಎಂ ವ್ಯಕ್ತಪಡಿಸಿದ್ದಾರೆ ಎಂದು ರಾಜಣ್ಣ ತಿಳಿಸಿದರು.ಅಧಿಕಾರ ಶಾಶ್ವತವಲ್ಲ; ಅದನ್ನು ಕಳೆದುಕೊಂಡವರೂ ಮತ್ತೆ ಪಡೆಯುತ್ತಾರೆ. ಹೀಗಾಗಿ ರಾಹುಲ್ ಗಾಂಧಿ ತೆಗೆದುಕೊಳ್ಳುವ ತೀರ್ಮಾನವನ್ನು ಗೌರವಿಸುವುದು ಸಿಎಂ ಅವರ ಮನೋಭಾವವಾಗಿದೆ ಎಂದು ಅವರು ಹೇಳಿದರು.ಸಿದ್ದರಾಮಯ್ಯ ಮುಂದುವರಿಯಬೇಕು ಎಂಬ ಅಭಿಪ್ರಾಯವನ್ನು ನಾವು ಹೈಕಮಾಂಡ್ಗೆ ತಿಳಿಸಿದ್ದೇವೆ ಎಂದು ರಾಜಣ್ಣ ಪ್ರತಿಕ್ರಿಯಿಸಿದರು.



