ನಟ ದರ್ಶನ್ ಜೈಲು ಸೌಲಭ್ಯಗಳ ಕುರಿತು ವರದಿ ಕೇಳಿದ ಸುಪ್ರೀಂ; ರಾಜ್ಯ ಸರ್ಕಾರಕ್ಕೆ ಒಂದು ವಾರದ ಗಡುವು
ಬೆಂಗಳೂರು: ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆ ವೇಳೆ ಸುಪ್ರೀಂಕೋರ್ಟ್ ಮಹತ್ವದ ನಿರ್ದೇಶನ ನೀಡಿದ್ದು, ಜೈಲಿನಲ್ಲಿ ಅಗತ್ಯ ಮೂಲಸೌಕರ್ಯ ಒದಗಿಸಲಾಗಿದೆಯೇ ಎಂಬ ಕುರಿತು ಒಂದು ವಾರದೊಳಗೆ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.
ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಜೆ.ಬಿ. ಪಾರ್ದಿವಾಲಾ ನೇತೃತ್ವದ ಪೀಠ ದರ್ಶನ್ ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಸಿ, ರಾಜ್ಯ ಸರ್ಕಾರ ಹಾಗೂ ವಿಚಾರಣಾಧೀನ ನ್ಯಾಯಾಲಯದಿಂದ ಪ್ರತ್ಯೇಕ ವರದಿ ಸಲ್ಲಿಸಲು ಆದೇಶಿಸಿದೆ.
ಜೈಲಿನಲ್ಲಿ ದರ್ಶನ್ ಅವರಿಗೆ ಸಮರ್ಪಕ ಸೌಲಭ್ಯ ಕಲ್ಪಿಸಲಾಗಿಲ್ಲ ಎಂದು ಹಿರಿಯ ವಕೀಲ ಮುಕುಲ್ ರೋಹಟಗಿ ನ್ಯಾಯಾಲಯದ ಗಮನಕ್ಕೆ ತಂದರು. “ದರ್ಶನ್ ಅವರನ್ನು ಬೆಳಕೇ ಇಲ್ಲದ ಸೆಲ್ನಲ್ಲಿ ಇರಿಸಲಾಗಿದೆ. ಅಗತ್ಯ ಮೂಲಭೂತ ಸೌಲಭ್ಯಗಳನ್ನು ನೀಡಲಾಗಿಲ್ಲ,” ಎಂದು ಅವರು ವಾದ ಮಂಡಿಸಿದರು.
ಈ ವಾದವನ್ನು ಆಲಿಸಿದ ನ್ಯಾಯಪೀಠ, ದರ್ಶನ್ ವಿರುದ್ಧದ ಪ್ರಕರಣದ ವಿಚಾರಣೆಯ ಪ್ರಗತಿ ಕುರಿತು ಕೂಡ ಮಾಹಿತಿ ನೀಡುವಂತೆ ವಿಚಾರಣಾಧೀನ ನ್ಯಾಯಾಲಯಕ್ಕೆ ಸೂಚಿಸಿದೆ.
ಈವರೆಗೆ ಎಷ್ಟು ಸಾಕ್ಷಿಗಳ ವಿಚಾರಣೆ ಪೂರ್ಣಗೊಂಡಿದೆ ಹಾಗೂ ಉಳಿದ ಸಾಕ್ಷಿಗಳ ವಿಚಾರಣೆ ಪೂರ್ಣಗೊಳ್ಳಲು ಇನ್ನಷ್ಟು ಎಷ್ಟು ಸಮಯ ಬೇಕಾಗುತ್ತದೆ ಎಂಬ ವಿವರಗಳನ್ನು ಒಂದು ವಾರದೊಳಗೆ ಸಲ್ಲಿಸುವಂತೆ ನ್ಯಾಯಾಲಯ ನಿರ್ದೇಶನ ನೀಡಿದೆ.
ರಾಜ್ಯ ಸರ್ಕಾರದ ವರದಿ ಹಾಗೂ ವಿಚಾರಣಾ ನ್ಯಾಯಾಲಯದ ಪ್ರಗತಿ ವರದಿ ಸಲ್ಲಿಕೆಯ ನಂತರ ದರ್ಶನ್ ಅವರ ಜಾಮೀನು ಅರ್ಜಿಯ ಮುಂದಿನ ವಿಚಾರಣೆ ನಡೆಯಲಿದೆ.



