ಸಿದ್ದರಾಮಯ್ಯ ಬಳಿಕ ಯಾರೇ ಸಿಎಂ ಆದರೂ ತಾತ್ಕಾಲಿಕ; ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ
ಶಿವಮೊಗ್ಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬದಲಾವಣೆಯ ಕುರಿತ ರಾಜಕೀಯ ಚರ್ಚೆಗಳು ತೀವ್ರಗೊಂಡಿರುವ ನಡುವೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಸಿದ್ದರಾಮಯ್ಯ ಅವರ ಹೊರತಾಗಿ ಯಾರೇ ಮುಖ್ಯಮಂತ್ರಿ ಆದರೂ ಅದು ತಾತ್ಕಾಲಿಕ ವ್ಯವಸ್ಥೆಯಾಗಲಿದೆ. ರಾಜ್ಯದಲ್ಲಿ ಅವಧಿಪೂರ್ವ ಚುನಾವಣೆ ಎದುರಾಗುವ ಸಾಧ್ಯತೆ ಇದೆ,” ಎಂದು ಭವಿಷ್ಯ ನುಡಿದರು.
ರಾಜ್ಯ ಸರ್ಕಾರದ ವೈಫಲ್ಯಗಳನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿ ಬದಲಾವಣೆಗೆ ಮುಂದಾಗಿದೆ ಎಂದು ಆರೋಪಿಸಿದ ವಿಜಯೇಂದ್ರ, “ಕೊನೆಗೂ ಕಾಂಗ್ರೆಸ್ ಹೈಕಮಾಂಡ್ ರಾಜ್ಯ ಸರ್ಕಾರದ ವೈಫಲ್ಯವನ್ನು ಒಪ್ಪಿಕೊಂಡಿದೆ. ಇದು ದೇಶದಲ್ಲಿ ಕಾಂಗ್ರೆಸ್ ಪಕ್ಷದ ಅವನತಿಗೆ ಮುನ್ಸೂಚನೆ,” ಎಂದು ಹೇಳಿದರು.
ದೆಹಲಿಯಲ್ಲಿ ನಡೆದ ದೀರ್ಘ ಸಭೆಯ ಕುರಿತು ಉಲ್ಲೇಖಿಸಿದ ಅವರು, “ನಿನ್ನೆ ಸುಮಾರು ಐದು ಗಂಟೆಗಳ ಕಾಲ ಮ್ಯಾರಥಾನ್ ಸಭೆ ನಡೆದಿದ್ದು, ಅದರ ಅಂತ್ಯದಲ್ಲಿ ಮುಖ್ಯಮಂತ್ರಿ ರಾಜೀನಾಮೆ ಕುರಿತ ನಿರ್ಧಾರ ಕೈಗೊಳ್ಳಲಾಗಿದೆ. ಭ್ರಷ್ಟಾಚಾರ ಮತ್ತು ಆಡಳಿತ ವೈಫಲ್ಯದ ಆರೋಪ ಎದುರಿಸುತ್ತಿರುವ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಹೈಕಮಾಂಡ್ ಒಪ್ಪಿಗೆ ನೀಡಿದೆ,” ಎಂದು ಆರೋಪಿಸಿದರು.
ಸಿದ್ದರಾಮಯ್ಯ ರಾಜೀನಾಮೆ ನೀಡಿದ ನಂತರ ಹೊಸ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆ ಸುಲಭವಾಗುವುದಿಲ್ಲ ಎಂದು ಹೇಳಿದ ವಿಜಯೇಂದ್ರ, “ರಾಜ್ಯ ಕಾಂಗ್ರೆಸ್ನಲ್ಲಿ ಗೊಂದಲದ ಪರಿಸ್ಥಿತಿ ಆರಂಭವಾಗಲಿದೆ. ಯಾರು ಮುಖ್ಯಮಂತ್ರಿ ಆಗುತ್ತಾರೆ ಎಂಬುದು ಮುಖ್ಯವಲ್ಲ. ಮುಖ್ಯವಾದುದು ಕಾಂಗ್ರೆಸ್ ಹೈಕಮಾಂಡ್ ರಾಜ್ಯ ಸರ್ಕಾರದ ವೈಫಲ್ಯವನ್ನು ಒಪ್ಪಿಕೊಂಡಿರುವುದು,” ಎಂದು ಹೇಳಿದರು.



