ಈ ವಾರವೇ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ ಕೆ ಶಿವಕುಮಾರ್
ಬೆಂಗಳೂರು, ಜು. 27: ಈ ವಾರದೊಳಗೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.
ಸೋಮವಾರ ದೆಹಲಿಗೆ ತೆರಳುವ ಮುನ್ನ ಬೆಂಗಳೂರಿನ ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಕುರಿತು ಪ್ರತಿಕ್ರಿಯಿಸಿ, “ಈ ವಿಚಾರದಲ್ಲಿ ಮಾಧ್ಯಮಗಳೇ ಹೆಚ್ಚು ಆತುರದಲ್ಲಿವೆ” ಎಂದು ಹಾಸ್ಯಚಟಾಕಿ ಹಾರಿಸಿದರು.
ಇದೇ ವೇಳೆ ದೆಹಲಿಯಲ್ಲಿ ರಾಜ್ಯದ ಸಂಸದರೊಂದಿಗೆ ನಡೆಯಲಿರುವ ಸಭೆಯ ಕುರಿತು ಮಾತನಾಡಿದ ಅವರು, ರಾಜ್ಯದ ಬರ ಪರಿಸ್ಥಿತಿ, ಕುಡಿಯುವ ನೀರಿನ ಸಮಸ್ಯೆ ಹಾಗೂ ಕಾವೇರಿ, ಮಹದಾಯಿ, ಮೇಕೆದಾಟು ಮತ್ತು ಕೃಷ್ಣಾ ಸೇರಿದಂತೆ ಪ್ರಮುಖ ನೀರಾವರಿ ಯೋಜನೆಗಳ ಕುರಿತು ಸಂಸದರಿಗೆ ಸಮಗ್ರ ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು.
ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ರಾಜ್ಯದ ಹಿತಾಸಕ್ತಿಯ ವಿಷಯಗಳಲ್ಲಿ ಎಲ್ಲ ಪಕ್ಷಗಳ ಸಹಕಾರ ಕೋರಲು ಸಂಸದರನ್ನು ಭೇಟಿಯಾಗುತ್ತಿರುವುದಾಗಿ ತಿಳಿಸಿದ ಅವರು, ಬಳಿಕ ಬೆಂಗಳೂರಿನಲ್ಲಿ ಸರ್ವಪಕ್ಷ ಸಭೆ ನಡೆಸಿ, ರಾಜ್ಯದ ಹಿರಿಯ ನಾಯಕರೊಂದಿಗೆ ಪ್ರಮುಖ ವಿಷಯಗಳ ಕುರಿತು ಚರ್ಚೆ ನಡೆಸಲಾಗುವುದು ಎಂದು ಹೇಳಿದರು.
ಈ ವಾರವೇ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ ಕೆ ಶಿವಕುಮಾರ್



