ಯಶವಂತಪುರ ಎಪಿಎಂಸಿಗೆ ಸಿಎಂ ಡಿಕೆಶಿ ದಿಢೀರ್ ಭೇಟಿ; ಕೂಲಿ ಕಾರ್ಮಿಕರ ಜೊತೆ ಕುಳಿತು ಇಡ್ಲಿ ಸವಿದ ಸಿಎಂ, ರೈತರ ಸಮಸ್ಯೆ ಆಲಿಕೆ
ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ ಮುಂಜಾನೆ 7 ಗಂಟೆಗೆ ಯಶವಂತಪುರದ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈರುಳ್ಳಿ ಮಂಡಿಗೆ ತೆರಳಿದ ಅವರು ಸ್ಥಳೀಯ ವರ್ತಕರು, ರೈತರು ಹಾಗೂ ಕೂಲಿ ಕಾರ್ಮಿಕರೊಂದಿಗೆ ಕುಳಿತು ಅವರ ಸಮಸ್ಯೆಗಳನ್ನು ಆಲಿಸಿದರು.
ಮಾರುಕಟ್ಟೆ ಪರಿಶೀಲನೆ ವೇಳೆ ರಸ್ತೆ ಬದಿಯ ಸಣ್ಣ ಪೆಟ್ಟಿಗೆ ಹೋಟೆಲ್ಗೆ ತೆರಳಿದ ಡಿ.ಕೆ. ಶಿವಕುಮಾರ್, ಅಲ್ಲಿದ್ದ ಕೂಲಿ ಕಾರ್ಮಿಕರೊಂದಿಗೆ ಕುಳಿತು ಇಡ್ಲಿ ಸೇವಿಸಿದರು. ಬಳಿಕ ತಮ್ಮೊಂದಿಗೆ ಕುಳಿತಿದ್ದ ಕೂಲಿ ಕಾರ್ಮಿಕರ ಉಪಹಾರದ ಬಿಲ್ ಪಾವತಿಸಲು ಮುಂದಾದ ಅವರು, ಹೋಟೆಲ್ ಮಾಲೀಕರಿಗೆ 500 ರೂ. ನೀಡಿ ಅವರಿಂದ ಹಣ ಪಡೆಯಬೇಡಿ ಎಂದು ಹೇಳಿದ್ದಾರೆ.
ಸಿಎಂ ಭೇಟಿ ವೇಳೆ ಎಪಿಎಂಸಿ ಮಾಜಿ ಸದಸ್ಯ ಅರುಣ್ ಪರಮೇಶ್ವರ್ ಸೇರಿದಂತೆ ಸ್ಥಳೀಯರು ಮಾರುಕಟ್ಟೆಯಲ್ಲಿರುವ ದುರವಸ್ಥೆ ಹಾಗೂ ಅವ್ಯವಸ್ಥೆಗಳ ಬಗ್ಗೆ ದೂರು ನೀಡಿದರು. ರೈತರಿಗೆ ಸಮರ್ಪಕ ಕುಡಿಯುವ ನೀರಿನ ಸೌಲಭ್ಯವಿಲ್ಲದೆ, ಒಂದು ಬಾಟಲಿ ನೀರಿಗೆ 20 ರೂ. ನೀಡಿ ಖರೀದಿಸುವ ಪರಿಸ್ಥಿತಿ ಇದೆ ಎಂದು ದೂರಿದರು. ಶೌಚಾಲಯದ ವ್ಯವಸ್ಥೆಯೂ ಸಮರ್ಪಕವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ರೈತರಿಗಾಗಿ ನಿರ್ಮಿಸಲಾದ ಮಾರುಕಟ್ಟೆಯಲ್ಲಿ ಹಿಂದಿನ ಅಧಿಕಾರಿಗಳ ಅವಧಿಯಲ್ಲಿ ಭ್ರಷ್ಟಾಚಾರ ಹಾಗೂ ಅವ್ಯವಹಾರ ನಡೆದಿದೆ ಎಂದು ಆರೋಪಿಸಿದ ಸ್ಥಳೀಯರು, ಇದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸುವುದಾಗಿ ತಿಳಿಸಿದ್ದಾರೆ.
ಮಂಡಿ ವ್ಯಾಪಾರಿಗಳು ಹಾಗೂ ರೈತರೊಂದಿಗೆ ನಡೆಸಿದ ಮಾತುಕತೆಯ ವೇಳೆ ರೈತರು ತಮ್ಮ ಸಮಸ್ಯೆಗಳನ್ನು ಡಿ.ಕೆ. ಶಿವಕುಮಾರ್ ಅವರ ಗಮನಕ್ಕೆ ತಂದರು. ಅಧಿಕಾರಿಗಳ ಸಮರ್ಪಕ ನಿಯಂತ್ರಣವಿಲ್ಲದ ಕಾರಣ ವ್ಯಾಪಾರಿಗಳು ತಮಗೆ ಬೇಕಾದ ರೀತಿಯಲ್ಲಿ ದರ ನಿಗದಿಪಡಿಸುತ್ತಿದ್ದಾರೆ ಎಂದು ರೈತರು ಆರೋಪಿಸಿದರು.
ಚಿತ್ರದುರ್ಗ ಸೇರಿದಂತೆ ಹೊರ ಜಿಲ್ಲೆಗಳಲ್ಲಿ ಮಾರುಕಟ್ಟೆ ಸಮಸ್ಯೆಗಳಿರುವ ಹಿನ್ನೆಲೆಯಲ್ಲಿ ರೈತರು ಯಶವಂತಪುರ ಎಪಿಎಂಸಿಗೆ ಬರುತ್ತಿದ್ದಾರೆ. ಆದರೆ ಇಲ್ಲಿ ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದೆ ಎಂದು ರೈತರು ಅಳಲು ತೋಡಿಕೊಂಡರು.
ಇದಲ್ಲದೆ, ಕೃಷಿ ಉತ್ಪನ್ನಗಳ ತೂಕದಲ್ಲಿಯೂ ಮೋಸ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದೆ. 65 ಕೆಜಿ ತೂಕದ ಮೂಟೆಯನ್ನು ಕೇವಲ 50 ಕೆಜಿ ಎಂದು ಲೆಕ್ಕ ಹಾಕಲಾಗುತ್ತಿದೆ ಎಂದು ರೈತರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಗಮನಕ್ಕೆ ತಂದರು.
ಮಾರುಕಟ್ಟೆಯಲ್ಲಿನ ಕುಡಿಯುವ ನೀರು, ಶೌಚಾಲಯ, ದರ ನಿಗದಿ, ಮಧ್ಯವರ್ತಿಗಳ ಹಾವಳಿ ಹಾಗೂ ತೂಕದ ವಿಚಾರ ಸೇರಿದಂತೆ ರೈತರು ಮುಂದಿಟ್ಟಿರುವ ಸಮಸ್ಯೆಗಳ ಬಗ್ಗೆ ಸಿಎಂ ಪರಿಶೀಲನೆ ನಡೆಸಿದ್ದಾರೆ.



