ಕೊಡಗಿನಲ್ಲಿ ಮಳೆಯ ಅಬ್ಬರ: ಭಾಗಮಂಡಲ ಜಲಾವೃತ, ರಸ್ತೆ ಸಂಪರ್ಕ ಕಡಿತದಿಂದ ಸಾರ್ವಜನಿಕರ ಪರದಾಟ
ಕೊಡಗು ಜಿಲ್ಲೆಯಲ್ಲಿ ನಿರಂತರ ಮಳೆಯ ಅಬ್ಬರ ಮುಂದುವರಿದಿದ್ದು, ಜಿಲ್ಲೆಯ ಹಲವು ಭಾಗಗಳಲ್ಲಿ ನೆರೆ ಪರಿಸ್ಥಿತಿ ನಿರ್ಮಾಣವಾಗಿದೆ. ಭಾರೀ ಮಳೆಯ ಪರಿಣಾಮ ಜನಜೀವನ ಅಸ್ತವ್ಯಸ್ತಗೊಂಡಿದ್ದು, ರಸ್ತೆ ಸಂಪರ್ಕ ಕಡಿತ ಸೇರಿದಂತೆ ಹಲವು ಸಮಸ್ಯೆಗಳು ಎದುರಾಗಿವೆ.
ಮಡಿಕೇರಿ ತಾಲೂಕಿನ ಭಾಗಮಂಡಲದ ತ್ರಿವೇಣಿ ಸಂಗಮ ಸಂಪೂರ್ಣ ಜಲಾವೃತಗೊಂಡಿದೆ. ಪ್ರವಾಹದ ನೀರು ಸ್ನಾನಘಟ್ಟವನ್ನು ಆವರಿಸಿರುವ ಕಾರಣ, ಪಿಂಡಪ್ರದಾನ ಸೇರಿದಂತೆ ಧಾರ್ಮಿಕ ವಿಧಿವಿಧಾನಗಳಿಗೆ ತಾತ್ಕಾಲಿಕ ಅಡ್ಡಿಯುಂಟಾಗಿದೆ.
ಇದೇ ವೇಳೆ, ಕಾವೇರಿ ನದಿ ಉಕ್ಕಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ವಿರಾಜಪೇಟೆ ತಾಲೂಕಿನ ಕರಡಿಗೋಡು ಗ್ರಾಮದ ರಸ್ತೆ ಸಂಪೂರ್ಣ ಮುಳುಗಡೆಯಾಗಿದೆ. ಅಲ್ಲದೆ, ಮಡಿಕೇರಿ ತಾಲೂಕಿನ ಹೊದವಾಡ ರಸ್ತೆಯೂ ನೀರಿನಲ್ಲಿ ಮುಳುಗಿದ್ದು, ವಾಹನ ಸಂಚಾರ ಸ್ಥಗಿತಗೊಂಡಿದೆ.
ಭಾರೀ ಮಳೆಯಿಂದ ಮೂರ್ನಾಡು–ನಾಪೋಕ್ಲು ರಸ್ತೆ ಸಂಪರ್ಕ ಕೂಡ ಕಡಿತಗೊಂಡಿದ್ದು, ಸಾರ್ವಜನಿಕರು ಹಾಗೂ ವಾಹನ ಸವಾರರು ಪರ್ಯಾಯ ಮಾರ್ಗಗಳ ಮೊರೆ ಹೋಗುವಂತಾಗಿದೆ. ಜಿಲ್ಲೆಯ ವಿವಿಧ ಭಾಗಗಳಲ್ಲಿ ಪ್ರವಾಹದ ಪರಿಸ್ಥಿತಿ ಉಂಟಾಗಿರುವುದರಿಂದ ಸಂಚಾರ, ದೈನಂದಿನ ಚಟುವಟಿಕೆಗಳು ಹಾಗೂ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರಿದೆ.
ಜಿಲ್ಲಾಡಳಿತವು ಮಳೆ ಪರಿಸ್ಥಿತಿಯನ್ನು ನಿರಂತರವಾಗಿ ಗಮನಿಸುತ್ತಿದ್ದು, ನದಿ ತೀರದ ಪ್ರದೇಶಗಳ ನಿವಾಸಿಗಳು ಎಚ್ಚರಿಕೆಯಿಂದ ಇರುವಂತೆ ಸೂಚಿಸಿದೆ. ಹವಾಮಾನ ಇಲಾಖೆ ಕೂಡ ಮುಂದಿನ ದಿನಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇರುವುದಾಗಿ ಮುನ್ಸೂಚನೆ ನೀಡಿದೆ.



