ಶಿವಮೊಗ್ಗದಲ್ಲಿ ಬೆಚ್ಚಿಬೀಳಿಸಿದ ಕೊಲೆ: ಮನೆಯಲ್ಲಿ ಮಲಗಿದ್ದ ಯುವಕನನ್ನು ಭೀಕರವಾಗಿ ಹತ್ಯೆಗೈದ ದುಷ್ಕರ್ಮಿಗಳು
ಶಿವಮೊಗ್ಗ: ತಾಲೂಕಿನ ಸುತ್ತುಕೋಟೆ ಗ್ರಾಮದಲ್ಲಿ ಯುವಕನೊಬ್ಬನನ್ನು ದುಷ್ಕರ್ಮಿಗಳು ಮನೆಯಲ್ಲೇ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಮೃತನನ್ನು ಸುತ್ತುಕೋಟೆ ನಿವಾಸಿ ಪ್ರವೀಣ್ (29) ಎಂದು ಗುರುತಿಸಲಾಗಿದೆ.
ಪ್ರವೀಣ್ ಗಾರೆ ಕೆಲಸದ ಜೊತೆಗೆ ಟ್ರಾಕ್ಟರ್ನ್ನು ಬಾಡಿಗೆಗೆ ನೀಡುವ ಉದ್ಯಮ ನಡೆಸುತ್ತಿದ್ದರು. ಗ್ರಾಮದಲ್ಲಿ ಸ್ವಂತ ಮನೆ ಹೊಂದಿದ್ದ ಅವರು, ಮನೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ಕಾರಣ ತಾತ್ಕಾಲಿಕವಾಗಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ನಿನ್ನೆ ರಾತ್ರಿ ಊಟ ಮುಗಿಸಿ ತಮ್ಮ ಸ್ವಂತ ಮನೆಯಲ್ಲಿ ಮಲಗಿದ್ದ ವೇಳೆ ದುಷ್ಕರ್ಮಿಗಳು ಮಾರಕಾಸ್ತ್ರದಿಂದ ತಲೆಗೆ ಹಲ್ಲೆ ನಡೆಸಿ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಇಂದು ಬೆಳಗ್ಗೆ ಕೆಲಸಕ್ಕೆ ಬರುವಂತೆ ಪ್ರವೀಣ್ ಕೆಲ ಯುವಕರಿಗೆ ಸೂಚನೆ ನೀಡಿದ್ದರು. ಆದರೆ ಬೆಳಗ್ಗೆಯಿಂದ ಹಲವು ಬಾರಿ ಕರೆ ಮಾಡಿದರೂ ಅವರು ಕರೆ ಸ್ವೀಕರಿಸದ ಹಿನ್ನೆಲೆಯಲ್ಲಿ ಯುವಕರು ಮನೆಗೆ ತೆರಳಿದ್ದಾರೆ. ಆಗ ಪ್ರವೀಣ್ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದ್ದು, ಘಟನೆ ಬೆಳಕಿಗೆ ಬಂದಿದೆ.
ತಕ್ಷಣವೇ ಕುಂಸಿ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ ವ್ಯವಹಾರಿಕ ವೈಷಮ್ಯ ಅಥವಾ ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ನಡೆದಿರಬಹುದೆಂಬ ಶಂಕೆ ವ್ಯಕ್ತವಾಗಿದೆ.
ಕುಂಸಿ ಠಾಣೆಯ ಸಿಪಿಐ ದೀಪಕ್ ನೇತೃತ್ವದ ಪೊಲೀಸ್ ತಂಡ ಸ್ಥಳ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗೆ ತನಿಖೆ ಮುಂದುವರಿಸಿದ್ದಾರೆ.



