ದರ್ಶನ್ʼಗೆ ಬಿಗ್ ಶಾಕ್: 14ನೇ ಆರೋಪಿ ಪ್ರದೋಷ್ ಮಾಫಿ ಸಾಕ್ಷಿ ಅರ್ಜಿಗೆ ಕೋರ್ಟ್ ಅಂಗೀಕಾರ
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ದರ್ಶನ್ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಪ್ರಕರಣದ 14ನೇ ಆರೋಪಿಯಾಗಿರುವ ಪ್ರದೋಷ್ ಸಲ್ಲಿಸಿದ್ದ ಮಾಫಿ ಸಾಕ್ಷಿ ಅರ್ಜಿಯನ್ನು ಬೆಂಗಳೂರಿನ ಸಿಸಿಹೆಚ್ 42 ಕೋರ್ಟ್ ಅಂಗೀಕರಿಸಿದೆ.
ಪ್ರದೋಷ್ ಅವರನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸಲು ಕೋರ್ಟ್ ಅನುಮತಿ ನೀಡಿದ್ದು, ಕೆಲವು ಷರತ್ತುಗಳನ್ನು ವಿಧಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತಮಗೆ ತಿಳಿದಿರುವ ಎಲ್ಲಾ ಸತ್ಯಾಂಶಗಳನ್ನು ನ್ಯಾಯಾಲಯದ ಮುಂದೆ ಹೇಳಬೇಕು ಎಂದು ಕೋರ್ಟ್ ಸೂಚಿಸಿದೆ.
ಒಂದು ವೇಳೆ ಪ್ರದೋಷ್ ಸುಳ್ಳು ಹೇಳಿಕೆ ನೀಡಿದರೆ ಅಥವಾ ಸತ್ಯಾಂಶವನ್ನು ಮರೆಮಾಚಿದರೆ, ಅವರನ್ನು ಮತ್ತೆ ಆರೋಪಿಯಾಗಿ ಪರಿಗಣಿಸುವ ಸಾಧ್ಯತೆಯಿದೆ ಎಂದು ಕೋರ್ಟ್ ಸ್ಪಷ್ಟಪಡಿಸಿದೆ. ಅಲ್ಲದೆ, ವಿಚಾರಣೆ ಪೂರ್ಣಗೊಳ್ಳುವವರೆಗೆ ಜೈಲಿನಲ್ಲೇ ಇರಬೇಕೆಂಬ ಷರತ್ತನ್ನೂ ವಿಧಿಸಲಾಗಿದೆ.
ಪ್ರದೋಷ್ ಇದೀಗ ಅಪ್ರೂವರ್ ಆಗಿ ದರ್ಶನ್ ಸೇರಿದಂತೆ ಪ್ರಕರಣದ ಉಳಿದ ಆರೋಪಿಗಳ ವಿರುದ್ಧ ಸಾಕ್ಷ್ಯ ನೀಡಲಿದ್ದಾರೆ. ಹೀಗಾಗಿ ಪ್ರಕರಣದ ಉಳಿದ 16 ಆರೋಪಿಗಳಿಗೆ ಸಂಕಷ್ಟ ಮತ್ತಷ್ಟು ಹೆಚ್ಚಾಗಿದೆ.
ಪ್ರದೋಷ್ ನೀಡಲಿರುವ ಹೇಳಿಕೆ ಹಾಗೂ ಸಾಕ್ಷ್ಯಗಳು ಪ್ರಕರಣದ ವಿಚಾರಣೆಯಲ್ಲಿ ಪ್ರಮುಖವಾಗುವ ಸಾಧ್ಯತೆಯಿದೆ. ದರ್ಶನ್ ಮತ್ತು ಇತರ ಆರೋಪಿಗಳ ವಿರುದ್ಧದ ಪ್ರಕರಣದಲ್ಲಿ ಪ್ರದೋಷ್ ಅವರ ಹೇಳಿಕೆ ಪ್ರಾಸಿಕ್ಯೂಷನ್ಗೆ ಮಹತ್ವದ ಅಸ್ತ್ರವಾಗುವ ನಿರೀಕ್ಷೆಯಿದೆ.



