No menu items!
18 C
Munich
Thursday, June 18, 2026

ವಿಧಾನ ಪರಿಷತ್ ಚುನಾವಣೆ: ಇಂದು ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಮಹತ್ವದ ಸಭೆ

Must read

ವಿಧಾನ ಪರಿಷತ್ ಚುನಾವಣೆ: ಇಂದು ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಮಹತ್ವದ ಸಭೆ

ರಾಮನಗರ: ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆ (ಸಿಎಲ್ಪಿ) ಇಂದು ಸಂಜೆ 6.30ಕ್ಕೆ ಬಿಡದಿಯ ವಂಡರ್ ಲಾ ರೆಸಾರ್ಟ್ನಲ್ಲಿ ನಡೆಯಲಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆಯಲಿರುವ ಈ ಸಭೆಗೆ ಪಕ್ಷವು ಅಗತ್ಯ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ.
ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ಖಚಿತಪಡಿಸಿಕೊಳ್ಳುವ ನಿಟ್ಟಿನಲ್ಲಿ ಸಭೆಯಲ್ಲಿ ಮಹತ್ವದ ಚರ್ಚೆಗಳು ನಡೆಯಲಿವೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಪಕ್ಷದ ಹಿರಿಯ ನಾಯಕರು ಹಾಗೂ ಶಾಸಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಜೂನ್ 18ರಂದು ವಿಧಾನಸಭೆಯಿಂದ ವಿಧಾನ ಪರಿಷತ್ಗೆ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ಐವರು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಪ್ರಸ್ತುತ ವಿಧಾನಸಭೆಯ ಸಂಖ್ಯಾಬಲದ ಆಧಾರದ ಮೇಲೆ ನಾಲ್ವರು ಅಭ್ಯರ್ಥಿಗಳ ಗೆಲುವು ಬಹುತೇಕ ಖಚಿತವಾಗಿದೆ. ಆದರೆ ಐದನೇ ಅಭ್ಯರ್ಥಿಯ ಗೆಲುವಿಗೆ ಅಗತ್ಯ ಮತಗಳ ಕೊರತೆ ಎದುರಾಗುವ ಸಾಧ್ಯತೆ ಇರುವುದರಿಂದ ಪಕ್ಷದ ನಾಯಕರು ವಿಶೇಷ ತಂತ್ರ ರೂಪಿಸುವ ನಿರೀಕ್ಷೆಯಿದೆ.
ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕರು ಇಂದು ಬಿಡದಿಯ ರೆಸಾರ್ಟ್ಗೆ ಆಗಮಿಸುತ್ತಿದ್ದು, ಸಿಎಲ್ಪಿ ಸಭೆಯ ಬಳಿಕ ಅವರು ಅಲ್ಲಿಯೇ ಎರಡು ದಿನಗಳ ಕಾಲ ವಾಸ್ತವ್ಯ ಹೂಡುವ ಸಾಧ್ಯತೆ ಇದೆ. ನಂತರ ರೆಸಾರ್ಟ್ನಿಂದಲೇ ನೇರವಾಗಿ ಮತದಾನಕ್ಕೆ ತೆರಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸಭೆಯ ಹಿನ್ನೆಲೆಯಲ್ಲಿ ರೆಸಾರ್ಟ್ ಸುತ್ತಮುತ್ತ ಬಿಗಿ ಪೊಲೀಸ್ ಭದ್ರತೆ ನಿಯೋಜಿಸಲಾಗಿದ್ದು, ಸಂಜೆ ಬಳಿಕ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ.

- Advertisement -spot_img

More articles

- Advertisement -spot_img

Latest article