ಧಾರ್ಮಿಕ ಉಡುಪು ಧರಿಸಿ ಪರೀಕ್ಷೆಗೆ ಹಾಜರಾಗುವವರಿಗೆ ಪ್ರತ್ಯೇಕ ಸೂಚನೆ; ಮುಂಚಿತ ಆಗಮನ ಮತ್ತು ತಪಾಸಣೆ ಕಡ್ಡಾಯ ಎಂದ ಗೃಹ ಸಚಿವ
ಬೆಂಗಳೂರು: ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆಯಲ್ಲಿ ಧಾರ್ಮಿಕ ಉಡುಪು ಧರಿಸಿ ಪರೀಕ್ಷೆ ಬರೆಯಲು ಬಯಸುವ ಅಭ್ಯರ್ಥಿಗಳಿಗೆ ಯಾವುದೇ ನಿರ್ಬಂಧವಿಲ್ಲ. ಆದರೆ ಅಂತಹ ಅಭ್ಯರ್ಥಿಗಳು ಪರೀಕ್ಷೆ ಆರಂಭವಾಗುವ 2 ಗಂಟೆ 30 ನಿಮಿಷಗಳಿಗೂ ಮುನ್ನವೇ ಪರೀಕ್ಷಾ ಕೇಂದ್ರಕ್ಕೆ ಹಾಜರಾಗಿ ತಪಾಸಣೆಗೆ ಒಳಪಡಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಚಿವರು, ಯಾವುದೇ ಧಾರ್ಮಿಕ ವಸ್ತ್ರಕ್ಕೆ ನಿರ್ಬಂಧ ವಿಧಿಸಿಲ್ಲ. ವಿದ್ಯಾರ್ಥಿಗಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಈ ಬಾರಿಯ ಪರೀಕ್ಷೆ ಆಯೋಜನೆಗೆ ರಾಜ್ಯ ಸರ್ಕಾರ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದು ತಿಳಿಸಿದ್ದಾರೆ.
ಪರೀಕ್ಷಾ ಕೇಂದ್ರಕ್ಕೆ ತರಬಹುದಾದ ಹಾಗೂ ನಿಷೇಧಿಸಲಾಗಿರುವ ವಸ್ತುಗಳ ಸಂಪೂರ್ಣ ಮಾಹಿತಿಯನ್ನು ಅಭ್ಯರ್ಥಿಗಳ ಹಾಲ್ ಟಿಕೆಟ್ನಲ್ಲಿ ಈಗಾಗಲೇ ನೀಡಲಾಗಿದೆ. ಎಲ್ಲ ಅಭ್ಯರ್ಥಿಗಳು ಕಡ್ಡಾಯವಾಗಿ ವಸ್ತ್ರ ಸಂಹಿತೆ ಪಾಲಿಸುವಂತೆ ಸಚಿವರು ಮನವಿ ಮಾಡಿದ್ದಾರೆ.
ಪರೀಕ್ಷೆ ಆರಂಭವಾದ ಬಳಿಕ 2 ಗಂಟೆ 30 ನಿಮಿಷಗಳ ನಂತರ ಆಗಮಿಸುವ ಅಭ್ಯರ್ಥಿಗಳಿಗೆ ಧಾರ್ಮಿಕ ಉಡುಪು ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಯಾವುದೇ ಗೊಂದಲಕ್ಕೆ ಒಳಗಾಗದೆ ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸುವಂತೆ ಉದ್ಯೋಗಾಕಾಂಕ್ಷಿಗಳಿಗೆ ಕರೆ ನೀಡಿದ್ದಾರೆ.
ಇದೇ ವೇಳೆ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಪ್ರಿಯಾಂಕ್ ಖರ್ಗೆ, ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆಗೆ ಕೈಗೊಂಡಿರುವ ಭದ್ರತಾ ಕ್ರಮಗಳ ಕುರಿತು ಮಾಹಿತಿ ನೀಡಿದ್ದಾರೆ.
ಪರೀಕ್ಷೆ ಮುಗಿದ 24 ಗಂಟೆಯೊಳಗೆ ಸಿಇಟಿ ವೆಬ್ಸೈಟ್ನಲ್ಲಿ ಒಎಂಆರ್ ಶೀಟ್ ಪ್ರಕಟಿಸಲಾಗುವುದು. ಪ್ರಶ್ನೆ ಮತ್ತು ಉತ್ತರಗಳನ್ನು ಬದಲಾಯಿಸುವ ವ್ಯವಸ್ಥೆ ಮಾಡಲಾಗಿದ್ದು, ಈ ಬಾರಿ ಮಲ್ಟಿಲೇಯರ್ ಒಎಂಆರ್ ಶೀಟ್ ಬಳಸಲಾಗುತ್ತಿದೆ ಎಂದು ಹೇಳಿದ್ದಾರೆ.
ಪರೀಕ್ಷಾ ಪ್ರಕ್ರಿಯೆಯನ್ನು ಟ್ಯಾಂಪರ್ ಪ್ರೂಫ್ ಮಾಡುವ ಉದ್ದೇಶದಿಂದ ಒನ್ ಟೈಂ ಸೆಕ್ಯೂರಿಟಿ ವ್ಯವಸ್ಥೆ ಅಳವಡಿಸಲಾಗಿದೆ. ಪ್ರಶ್ನೆ ಪತ್ರಿಕೆಗಳನ್ನು ಸುರಕ್ಷಿತ ಮುದ್ರಣ ಪ್ರಕ್ರಿಯೆಯ ಮೂಲಕ ಹೊರ ರಾಜ್ಯದಲ್ಲಿ ಮುದ್ರಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಪ್ರತಿ ಪರೀಕ್ಷಾ ಕೊಠಡಿಯಲ್ಲಿ ಜಾಮರ್ ಅಳವಡಿಸಲಾಗುತ್ತಿದ್ದು, ಮೊಬೈಲ್ ಫೋನ್ ಹಾಗೂ ಬ್ಲೂಟೂತ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಭದ್ರತೆ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಪ್ರತ್ಯೇಕ ಸೂಚನೆ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಪರೀಕ್ಷಾ ಕೇಂದ್ರಗಳ ಮೇಲೆ ನಿಗಾ ಇಡಲು ಫ್ಲೈಯಿಂಗ್ ಸ್ಕ್ವಾಡ್ ರಚಿಸಲಾಗಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗುತ್ತದೆ. ಅಗತ್ಯವಿದ್ದಲ್ಲಿ ವಾಹನ ಸಂಚಾರಕ್ಕೂ ನಿರ್ಬಂಧ ವಿಧಿಸಲಾಗುವುದು ಎಂದು ಹೇಳಿದ್ದಾರೆ.
ಐವರು ಪರೀಕ್ಷಾರ್ಥಿಗಳ ಸಮ್ಮುಖದಲ್ಲೇ ಪ್ರಶ್ನೆ ಪತ್ರಿಕೆಯ ಸೀಲ್ ತೆರೆಯಲಾಗುವುದು. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಸಲಾಗುತ್ತದೆ. ಅಧಿಕಾರಿಗಳ ಮೊಬೈಲ್ ಬಳಕೆಯ ಮೇಲೂ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ಇರಿಸಲಾಗುತ್ತಿದ್ದು, ತಾಲೂಕು ಹಾಗೂ ಜಿಲ್ಲಾಮಟ್ಟದಲ್ಲಿ ವಿಜಿಲೆನ್ಸ್ ತಂಡಗಳನ್ನು ನಿಯೋಜಿಸಲಾಗಿದೆ. ಹಿಂದಿನ ಆರೋಪಿಗಳು, ಅನುಮಾನಾಸ್ಪದ ವ್ಯಕ್ತಿಗಳು ಹಾಗೂ ಕೋಚಿಂಗ್ ಸೆಂಟರ್ಗಳ ಮೇಲೂ ನಿಗಾ ವಹಿಸಲಾಗುತ್ತಿದೆ.
ಪರೀಕ್ಷಾ ಪ್ರಕ್ರಿಯೆಯಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ಕಂಡುಬಂದರೆ ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಎಚ್ಚರಿಕೆ ನೀಡಿದ್ದಾರೆ.



