ಹೃದಯಾಘಾತಕ್ಕೆ ಮತ್ತೊಂದು ಬಲಿ: ಪಾಠ ಮಾಡುವಾಗಲೇ ಕುಸಿದು ಬಿದ್ದು ಶಿಕ್ಷಕ ಸಾವು!
ಹಾಸನ: ಪಾಠ ಮಾಡುತ್ತಿದ್ದ ವೇಳೆ ತೀವ್ರ ಹೃದಯಾಘಾತ ಸಂಭವಿಸಿ ಮುಖ್ಯ ಶಿಕ್ಷಕರೊಬ್ಬರು ವಿದ್ಯಾರ್ಥಿಗಳ ಮುಂದೆಯೇ ಸಾವನ್ನಪ್ಪಿರುವ ಮನಕಲಕುವ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಕೆಬ್ಬೆಕೊಪ್ಪಲು ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಕೇರಳಾಪುರ ಗ್ರಾಮದ ಸತೀಶ್ (53) ಎಂದು ಗುರುತಿಸಲಾಗಿದೆ. ಅವರು ಕೆಬ್ಬೆಕೊಪ್ಪಲು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು. ಎಂದಿನಂತೆ ತರಗತಿಯಲ್ಲಿ ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿದ್ದ ವೇಳೆ ಅವರಿಗೆ ಏಕಾಏಕಿ ತೀವ್ರ ಆಯಾಸ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲೇ ಅಸ್ವಸ್ಥಗೊಂಡು ತರಗತಿಯಲ್ಲೇ ಕುಸಿದು ಬಿದ್ದಿದ್ದಾರೆ.
ಈ ದೃಶ್ಯ ಕಂಡ ವಿದ್ಯಾರ್ಥಿಗಳು ತಕ್ಷಣವೇ ಇತರ ಶಿಕ್ಷಕರಿಗೆ ಮಾಹಿತಿ ನೀಡಿದ್ದಾರೆ. ಸಹ ಶಿಕ್ಷಕರು ಕೂಡಲೇ ಆಂಬುಲೆನ್ಸ್ಗೆ ಕರೆ ಮಾಡಿ ಸತೀಶ್ ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ವೈದ್ಯರು ಪರೀಕ್ಷಿಸಿದಾಗ ಮಾರ್ಗಮಧ್ಯೆಯೇ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ. ತೀವ್ರ ಹೃದಯಾಘಾತವೇ ಸಾವಿಗೆ ಕಾರಣ ಎಂದು ತಿಳಿದುಬಂದಿದೆ.
ನೆಚ್ಚಿನ ಶಿಕ್ಷಕರ ಅಕಾಲಿಕ ನಿಧನದಿಂದ ಶಾಲಾ ಆವರಣದಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ. ವಿದ್ಯಾರ್ಥಿಗಳು ಹಾಗೂ ಸಹ ಶಿಕ್ಷಕರು ಕಣ್ಣೀರಿಟ್ಟಿದ್ದಾರೆ. ಘಟನೆ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗಿದೆ.






