ಈದ್ಗಾ ಮೈದಾನ ಕಂದಾಯ ಇಲಾಖೆಗೆ ಸೇರಿದ ಸ್ವತ್ತು ಎಂದು ಬಿಬಿಎಂಪಿ ಆದೇಶ ಹೊರಡಿಸುತ್ತಿದ್ದಂತೆ ಚಾಮರಾಜಪೇಟೆಯಲ್ಲಿ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ. ಚಾಮರಾಜಪೇಟೆಯ ನಾಗರಿಕರ ಒಕ್ಕೂಟ ಸೇರಿದಂತೆ ಅನೇಕ ಸಂಘಟನೆಗಳು ಇಂದು ಮೈದಾನದ ಬಳಿ ಸಮಾವೇಶಗೊಂಡು ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿ ಪರಸ್ಪರ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು. ನಾಗರಿಕ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳು, ವಿವಿಧ ಸಂಘಟನೆಗಳ ಮುಖಂಡರು, ಬೀದಿಬದಿ ವ್ಯಾಪಾರಿಗಳು ಎಲ್ಲರೂ ಇಂದು ಸರ್ಕಾರಕ್ಕೆ ಮತ್ತು ಬಿಬಿಎಂಪಿಗೆ ಕೃತಜ್ಞತೆ ಸಲ್ಲಿಸಿದರು. ಬಹಳ ದಿನಗಳಿಂದ ಈ ಮೈದಾನ ಸರ್ಕಾರದ ಆಸ್ತಿಯಾಗಬೇಕೆಂದು ಹೋರಾಟ ಮಾಡುತ್ತಿದ್ದೇವೆ. ಇದು ಸುವರ್ಣಾಕ್ಷರಗಳಲ್ಲಿ ಬರೆದಿಡುವ ದಿನ. ಇಂತಹ ಒಂದು ದಿಟ್ಟತನದ ತೀರ್ಮಾನವನ್ನು ಸರ್ಕಾರ ಕೈಗೊಂಡಿದೆ. ಹೀಗಾಗಿ ನಾವು ಸರ್ಕಾರವನ್ನು ಅಭಿನಂದಿಸುತ್ತೇವೆ ಎಂದು ಒಕ್ಕೂಟದ ಮುಖಂಡ ಎಸ್.ರುಕ್ಮಾಂಗದ, ಪಾಲಿಕೆ ಮಾಜಿ ಸದಸ್ಯ ಬಿ.ವಿ.ಗಣೇಶ್ ಮತ್ತಿತರರು ಹೇಳಿದರು.