ಕೆಂಗೇರಿ ಸಮೀಪದ ಶಾಲೆಯಲ್ಲಿ ಭೀಕರ ಅಗ್ನಿ ಅವಘಡ; ತಪ್ಪಿದ ಅನಾಹುತ
ಬೆಂಗಳೂರು: ಕೆಂಗೇರಿ ಸಮೀಪದ ನಾಗದೇವನಹಳ್ಳಿಯ ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡು ಆತಂಕದ ವಾತಾವರಣ ನಿರ್ಮಾಣವಾಯಿತು. ತರಗತಿಗಳು ನಡೆಯುತ್ತಿದ್ದ ವೇಳೆಯೇ ಶಾಲೆಯ ಮೂರನೇ ಹಾಗೂ ನಾಲ್ಕನೇ ಮಹಡಿಗಳಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸಿಬ್ಬಂದಿಯ ಸಮಯಪ್ರಜ್ಞೆಯಿಂದ ದೊಡ್ಡ ಅನಾಹುತ ತಪ್ಪಿದೆ.
ಬೆಂಕಿ ಕಾಣಿಸಿಕೊಂಡ ತಕ್ಷಣ ಶಿಕ್ಷಕರು ಹಾಗೂ ಸಿಬ್ಬಂದಿ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಹೊರಗೆ ಸ್ಥಳಾಂತರಿಸಿದರು. ಸುಮಾರು 2,000 ವಿದ್ಯಾರ್ಥಿಗಳು ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಎಲ್ಲರನ್ನೂ ತುರ್ತಾಗಿ ಕಟ್ಟಡದಿಂದ ಹೊರಗೆ ಕರೆತರಲಾಯಿತು. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ಗಾಯಗಳಾಗಿಲ್ಲ ಎಂಬುದು ಸಮಾಧಾನಕರ ಸಂಗತಿ.
ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ನಾಲ್ಕು ವಾಹನಗಳೊಂದಿಗೆ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ಕೈಗೊಂಡರು. ಬೆಂಕಿಯ ಕೆನ್ನಾಲಿಗೆ ನಾಲ್ಕನೇ ಮಹಡಿಯಿಂದ ಮೂರನೇ ಮಹಡಿಗೂ ವ್ಯಾಪಿಸಿತ್ತು ಎಂದು ತಿಳಿದುಬಂದಿದೆ.
ಇಂದು ಬೆಳಗ್ಗೆ ಶಾಲೆ ಎಂದಿನಂತೆ ಆರಂಭವಾಗಿದ್ದು, ಸುಮಾರು 10.15ರ ವೇಳೆಗೆ ನಾಲ್ಕನೇ ಮಹಡಿಯಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿದೆ. ಇದೇ ವೇಳೆ ಶಾಲೆಯಲ್ಲಿ 50ಕ್ಕೂ ಹೆಚ್ಚು ಪೋಷಕರ ಸಭೆ ನಡೆಯುತ್ತಿತ್ತು. ಘಟನೆ ತಿಳಿಯುತ್ತಿದ್ದಂತೆ ಆತಂಕಗೊಂಡ ನೂರಾರು ಪೋಷಕರು ಶಾಲೆಗೆ ಧಾವಿಸಿ ಗೇಟ್ ಬಳಿ ಸೇರಿದ್ದರು.
ಪ್ರಸ್ತುತ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ಸಂಪೂರ್ಣ ನಿಯಂತ್ರಣಕ್ಕೆ ತರುವ ಕಾರ್ಯದಲ್ಲಿ ನಿರತರಾಗಿದ್ದು, ಅವಘಡದ ನಿಖರ ಕಾರಣದ ಕುರಿತು ಪರಿಶೀಲನೆ ಮುಂದುವರಿದಿದೆ.



