ಬರ ಪರಿಹಾರಕ್ಕಾಗಲಿ ಒಂದು ರೂಪಾಯಿ ಬಿಡುಗಡೆ ಮಾಡಿಲ್ಲ !

0
147

ಮೈಸೂರು: ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರಬಾರದು ಎಂದು ಮೈಸೂರಿನಲ್ಲಿ ಮಾಜಿ ಉಪಮುಖ್ಯಮಂತ್ರಿ ಕೆಎಸ್ ಈಶ್ವರಪ್ಪ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬರ ಇದೆ. ರೈತರ ಆತ್ಮಹತ್ಯೆಗೆ ಲೆಕ್ಕ ಸಿಗ್ತಾ ಇಲ್ಲ. ಇಂತಹ ಪರಿಸ್ಥಿತಿಯಲ್ಲಿ ಕರ್ನಾಟಕ ರಾಜ್ಯ ಇದೆ. ಒಬ್ಬನೇ ಒಬ್ಬ ಉಸ್ತುವಾರಿ ಸಚಿವ ರೈತರ ಸಮಸ್ಯೆ ಕೇಳಿಲ್ಲ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳಂತೂ ಸಿಎಂ ಸ್ಥಾನದ ಬಗ್ಗೆ ಬಡಿದಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ರೈತರು ಆತ್ಮಹತ್ಯೆ ಮಾಡಿಕೊಳ್ಳಲು ರಾಜ್ಯದಲ್ಲಿ ಈ ಸರ್ಕಾರ ತಂದಿದ್ದಾರೆ. ಇದುವರೆಗೂ ಬೆಳೆ ಪರಿಹಾರಕ್ಕಾಗಲಿ, ಬರ ಪರಿಹಾರಕ್ಕಾಗಲಿ ಒಂದು ರೂಪಾಯಿ ಬಿಡುಗಡೆ ಮಾಡಿಲ್ಲ. ನಿಮ್ಮ ನಾಯಕರಾದ ಸುರ್ಜೇವಾಲ, ವೇಣುಗೋಪಾಲ್ ಹೇಳಿದ ಮೇಲೂ ನಿಮ್ಮಿಷ್ಟದ ಹೇಳಿಕೆ ಕೊಡುತ್ತಿದ್ದೀರಾ ಅಂದರೆ ನಿಮ್ಮಲ್ಲಿ ಶಿಸ್ತಿಲ್ಲ. ರೈತರ ಬಗ್ಗೆ ಕಾಳಜಿ ಇಲ್ಲ. ಹೀಗಾಗಿ ಆಡಳಿತದ ಚುಕ್ಕಾಣಿ ಹಿಡಿಯುವ ಅಧಿಕಾರ ಇವರಿಗಿಲ್ಲ ಎಂದು ವಾಗ್ದಾಳಿ ನಡೆಸಿದರು.