ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಾಳೆ ಭಾರತ ಹಾಗೂ ದಕ್ಷಿಣ ಅಫ್ರಿಕಾ ತಂಡಗಳ ನಡುವೆ ಕ್ರಿಕೆಟ್ ಪಂದ್ಯ ನಡೆಯಲಿದೆ. ಈ ಹಿನ್ನೆಲೆ ಟಿ-20 ಕ್ರಿಕೆಟ್ ಪಂದ್ಯಾವಳಿ ವೀಕ್ಷಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರೇಕ್ಷಕರು ಬರುವುದರಿಂದ ಸುಗಮ ಸಂಚಾರ ದೃಷ್ಟಿಯಿಂದ ಕ್ರೀಡಾಂಗಣ ಮತ್ತು ಸುತ್ತಮುತ್ತಲಿನ ರಸ್ತೆಗಳಲ್ಲಿ ಸಂಚಾರ ಮಾರ್ಪಾಡು ಮಾಡಲಾಗಿದೆ.
ನಾಳೆ ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 12.30ರವರೆಗೆ ಕ್ವೀನ್ಸ್ ರಸ್ತೆ, ಎಂಜಿ ರಸ್ತೆ, ರಾಜಭವನ ರಸ್ತೆ, ಸೆಂಟ್ ಮಾಕ್ರ್ಸ್ ರಸ್ತೆ, ಮ್ಯೂಸಿಯಂ ರಸ್ತೆ, ಕಬ್ಬನ್ ಪಾರ್ಕ್ ಲ್ಯಾವೆಲ್ಲಿ ರಸ್ತೆ, ವಿಠಲ್ ಮಲ್ಯ ರಸ್ತೆ, ಸಿದ್ದಲಿಗಯ್ಯ ವೃತ್ತದಿಂದ ಬಿಷಪ್ ಕಾಟನ್ ಬಾಲಕಿಯರ ಶಾಲೆಯವರೆಗೆ ವಾಹನಗಳ ನಿಲುಗಡೆ ನಿಷೇಧಿಸಲಾಗಿದೆ. ಪಂದ್ಯ ವೀಕ್ಷಣೆಗೆ ಬರುವ ವಾಹನಗಳನ್ನು ಮಲ್ಯ ಆಸ್ಪತ್ರೆ ರಸ್ತೆಯ ಸೆಂಟ್ ಜೋಸೆಫ್ ಇಂಡಿಯನ್ ಹೈಸ್ಕೂಲ್ ಮೈದಾನ, ಮ್ಯೂಸಿಯಂ ರಸ್ತೆಯ ಸೆಂಟ್ ಜೋಸೆಫ್ ಬಾಯ್ಸ್ ಹೈಸ್ಕೂಲ್ ಆವರಣ ಮತ್ತು ಯುಬಿ ಸಿಟಿ ಆವರಣದಲ್ಲಿ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ. ಶಿವಾಜಿನಗರ ಬಸ್ ನಿಲ್ದಾಣದ 1ನೆ ಮಹಡಿ ಮತ್ತು ಕೆಎಸ್ಸಿಎ ಸದಸ್ಯರ ವಾಹನವನ್ನು ಬೌರಿಂಗ್ ಇನ್ಸಿಟ್ಯೂಟ್ನಲ್ಲಿ ನಿಲುಗಡೆಗೆ ವ್ಯವಸ್ಥೆ ಕಲ್ಪಿಸಲಾಗಿದೆ.