ಮೈಸೂರು ದಸರಾದಲ್ಲಿ ಈ ಬಾರಿ ಕಂಬಳ; ಸಚಿವ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಈ ಬಾರಿ ಕಂಬಳ ಆಯೋಜಿಸಲಾಗುವುದು ಎಂದು ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ.
ವೀರನಹೊಸಹಳ್ಳಿಯಲ್ಲಿ ಗಜಪಯಣಕ್ಕೆ ಚಾಲನೆ ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಗಾಗಲೇ ಗುರುತಿಸಿರುವ ಸ್ಥಳದಲ್ಲೇ ಕಂಬಳ ನಡೆಯಲಿದೆ. ಮುಖ್ಯಮಂತ್ರಿ ಅವರೂ ಕಂಬಳ ನಡೆಸುವಂತೆ ಸೂಚನೆ ನೀಡಿದ್ದಾರೆ ಎಂದು ತಿಳಿಸಿದರು.
ಇಂದು ವೀರನಹೊಸಹಳ್ಳಿಯಲ್ಲಿ ಪೂಜೆ ಸಲ್ಲಿಸುವ ಮೂಲಕ ಗಜಪಯಣಕ್ಕೆ ಚಾಲನೆ ನೀಡಲಾಗಿದೆ. ಕಳೆದ 25 ವರ್ಷಗಳಿಂದ ದಸರಾ ಮಹೋತ್ಸವದಲ್ಲಿ ಭಾಗಿಯಾಗಿದ್ದ ಅಭಿಮನ್ಯು ಈ ಬಾರಿ ನಿವೃತ್ತಿಯಾಗಿರುವ ಹಿನ್ನೆಲೆಯಲ್ಲಿ ಆನೆಗೆ ವಿಶೇಷ ಪೂಜೆ ಸಲ್ಲಿಸಿ ಬೀಳ್ಕೊಡುಗೆ ನೀಡಲಾಯಿತು.
ಅಭಿಮನ್ಯು ಒಟ್ಟು 6 ಬಾರಿ ಅಂಬಾರಿ ಹೊತ್ತಿದ್ದಾನೆ. ಈ ಬಾರಿ ಅಂಬಾರಿ ಹೊರುವ ಆನೆಯ ಆಯ್ಕೆ ಇನ್ನೂ ಅಂತಿಮವಾಗಿಲ್ಲ. ಆನೆಗಳಿಗೆ ತಾಲೀಮು ನೀಡಿದ ಬಳಿಕ ಅಂಬಾರಿ ಹೊರುವ ಆನೆಯನ್ನು ಆಯ್ಕೆ ಮಾಡಲಾಗುವುದು ಎಂದು ಸಚಿವರು ಹೇಳಿದರು.
ಅಭಿಮನ್ಯುವನ್ನು ನಿಶಾನೆ ಆನೆಯಾಗಿ ಮತ್ತೆ ಕರೆತರುವ ಬಗ್ಗೆಯೂ ಇನ್ನೂ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಸಾಧ್ಯತೆಗಳನ್ನು ಪರಿಶೀಲಿಸಿದ ಬಳಿಕ ಈ ಕುರಿತು ತೀರ್ಮಾನಿಸಲಾಗುವುದು ಎಂದು ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.



