No menu items!
18.2 C
Munich
Wednesday, August 19, 2026

ಮಾಜಿ ಸಚಿವ ಬಿ.ಸಿ.ನಾಗೇಶ್ ನಿಧನ: ಸಿಎಂ ಸೇರಿ ಗಣ್ಯರಿಂದ ಸಂತಾಪ ಸೂಚನೆ

Must read

ಮಾಜಿ ಸಚಿವ ಬಿ.ಸಿ.ನಾಗೇಶ್ ನಿಧನ: ಸಿಎಂ ಸೇರಿ ಗಣ್ಯರಿಂದ ಸಂತಾಪ ಸೂಚನೆ

ಬೆಂಗಳೂರು: ಮಾಜಿ ಶಿಕ್ಷಣ ಸಚಿವ ಹಾಗೂ ತಿಪಟೂರು ಮಾಜಿ ಶಾಸಕ ಬಿ.ಸಿ.ನಾಗೇಶ್ ನಿಧನಕ್ಕೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಹಾಗೂ ವಿಜಯೇಂದ್ರ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
ಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಎಕ್ಸ್ ಖಾತೆ ಮೂಲಕ ಸಂತಾಪ ಸೂಚಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕ ಅರವಿಂದ್ ಬೆಲ್ಲದ್, ಹರೀಶ್ ಪೂಂಜಾ ಸೇರಿದಂತೆ ಹಲವು ನಾಯಕರೂ ಸಂತಾಪ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ನಾಗೇಶ್ ಅವರು ಅಜಾತಶತ್ರುವಾಗಿದ್ದು ಎಲ್ಲರನ್ನೂ ಆತ್ಮೀಯವಾಗಿ ಮಾತನಾಡಿಸುತ್ತಿದ್ದರು ಎಂದು ಸ್ಮರಿಸಿದ್ದಾರೆ. ಅವರ ಅಗಲಿಕೆ ಬಿಜೆಪಿಗೆ ತುಂಬಲಾರದ ನಷ್ಟ ಎಂದ ಅವರು, ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡುವಂತೆ ಪ್ರಾರ್ಥಿಸಿದ್ದಾರೆ.
ಎಂಎಲ್ಸಿ ಸಿ.ಟಿ.ರವಿ ಮಾತನಾಡಿ, ಬಿ.ಸಿ.ನಾಗೇಶ್ ಮೃದು ಹೃದಯದ ವ್ಯಕ್ತಿಯಾಗಿದ್ದು, ರಾಜಕೀಯ ಮೀರಿ ಜನಪ್ರೀತಿ ಸಂಪಾದಿಸಿದ್ದರು ಎಂದು ಬಣ್ಣಿಸಿದರು. ಒಬ್ಬ ಆತ್ಮೀಯ ಸ್ನೇಹಿತನನ್ನು ಕಳೆದುಕೊಂಡಿರುವುದಾಗಿ ಹೇಳಿದ ಅವರು, ಶಾಸಕರಾಗುವ ಮುನ್ನವೇ ಎಬಿವಿಪಿಯಲ್ಲಿ ಸೇವೆ ಸಲ್ಲಿಸಿದ್ದ ನಾಗೇಶ್ ಕೊನೆಯವರೆಗೂ ಪಕ್ಷ ಹಾಗೂ ಜನಸೇವೆಯಲ್ಲಿ ತೊಡಗಿಸಿಕೊಂಡಿದ್ದರು ಎಂದು ಸ್ಮರಿಸಿದರು.
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಾಗೇಶ್ ಅವರನ್ನು ಸರಳ, ಸಜ್ಜನ ‘ಜೆಂಟಲ್ಮ್ಯಾನ್ ಇನ್ ಪಾಲಿಟಿಕ್ಸ್’ ಎಂದು ಬಣ್ಣಿಸಿದರು. ತಿಪಟೂರು ಕ್ಷೇತ್ರದ ಅಭಿವೃದ್ಧಿ, ವಿಶೇಷವಾಗಿ ನೀರಾವರಿ ಯೋಜನೆಗಳಿಗಾಗಿ ನಾಗೇಶ್ ಸಾಕಷ್ಟು ಶ್ರಮಿಸಿದ್ದರು ಎಂದು ಸ್ಮರಿಸಿದ ಬೊಮ್ಮಾಯಿ, ತಾವು ಮುಖ್ಯಮಂತ್ರಿಯಾಗಿದ್ದ ವೇಳೆ ಶಿಕ್ಷಣ ಸಚಿವರಾಗಿ ಹೊಸ ಶಿಕ್ಷಣ ನೀತಿ ಜಾರಿಗೆ ತರಲು ನಾಗೇಶ್ ಶ್ರಮಿಸಿದ್ದರು ಎಂದರು. ಒಬ್ಬ ಗೆಳೆಯನನ್ನು ಕಳೆದುಕೊಂಡಿರುವುದಾಗಿ ಹೇಳಿದ ಅವರು, ಬಿಜೆಪಿಗೆ, ರಾಜ್ಯಕ್ಕೆ ಹಾಗೂ ವೈಯಕ್ತಿಕವಾಗಿ ಇದು ನೋವಿನ ಸಂಗತಿ ಎಂದು ಸಂತಾಪ ಸೂಚಿಸಿದರು.

- Advertisement -spot_img

More articles

- Advertisement -spot_img

Latest article