ರಾಜ್ಯ ಕಾಂಗ್ರೆಸ್ನಲ್ಲಿ ನಾಯಕತ್ವ ಗೊಂದಲ: ಹೈಕಮಾಂಡ್ ಬೇಗ ನಿರ್ಧಾರ ಕೈಗೊಳ್ಳಲಿ ಎಂದ ರಾಜಣ್ಣ
ಮೈಸೂರು: ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆ ಕುರಿತು ಉಂಟಾಗಿರುವ ಗೊಂದಲವನ್ನು ಕಾಂಗ್ರೆಸ್ ಹೈಕಮಾಂಡ್ ಶೀಘ್ರದಲ್ಲೇ ನಿವಾರಿಸಬೇಕು ಎಂದು ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ಕೆ.ಎನ್. ರಾಜಣ್ಣ ಆಗ್ರಹಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೈಸೂರಿನ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಸಿಎಂ ಸಿದ್ದರಾಮಯ್ಯ ಅವರು ಹೈಕಮಾಂಡ್ ಏನು ತೀರ್ಮಾನ ಮಾಡುತ್ತದೆಯೋ ಅದನ್ನೇ ಅನುಸರಿಸುತ್ತೇನೆ ಎಂದು ಹೇಳಿದ್ದಾರೆ. ಆದ್ದರಿಂದ ರಾಜ್ಯದಲ್ಲಿ ಸೃಷ್ಟಿಯಾಗಿರುವ ಗೊಂದಲವನ್ನು ಹೈಕಮಾಂಡ್ ಬೇಗ ಬಗೆಹರಿಸಬೇಕು. ಇಲ್ಲದಿದ್ದರೆ ಸರ್ಕಾರ ಮತ್ತು ಪಕ್ಷ ಎರಡಕ್ಕೂ ಪರಿಣಾಮ ಬೀರುತ್ತದೆ” ಎಂದು ಎಚ್ಚರಿಸಿದರು.
ಈ ವಿಚಾರವನ್ನು ತಾವು ಹೈಕಮಾಂಡ್ ಭೇಟಿಯ ವೇಳೆ ನೇರವಾಗಿ ತಿಳಿಸಿದ್ದು ಮಾತ್ರವಲ್ಲದೆ, ಪತ್ರ ಬರೆದು ಸಹ ಮನವರಿಕೆ ಮಾಡಿದ್ದೇನೆ ಎಂದು ರಾಜಣ್ಣ ಹೇಳಿದರು.
ಸಚಿವ ಸಂಪುಟ ವಿಸ್ತರಣೆಗೆ ಅವಕಾಶ ನೀಡಬೇಕು. ಇಲ್ಲವಾದರೆ ನಾಯಕತ್ವ ಬದಲಾವಣೆ ಬಗ್ಗೆ ಸ್ಪಷ್ಟ ನಿರ್ಧಾರ ಕೈಗೊಳ್ಳಬೇಕು ಎಂದು ಒತ್ತಾಯಿಸಿದ ಅವರು, “ಯಾವ ನಿರ್ಧಾರವಾದರೂ ವಿಳಂಬ ಮಾಡದೆ ಬೇಗ ತೆಗೆದುಕೊಳ್ಳಬೇಕು” ಎಂದು ಹೇಳಿದರು.
ಇದೇ ವೇಳೆ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಸ್ಥಾನಾಕಾಂಕ್ಷೆ ಕುರಿತು ಪ್ರತಿಕ್ರಿಯಿಸಿದ ರಾಜಣ್ಣ, “ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಆಗುವ ಅರ್ಹತೆ ಹೊಂದಿರುವವರು ಡಜನ್ಗಟ್ಟಲೆ ಇದ್ದಾರೆ. ಹೀಗಾಗಿ ಡಿ.ಕೆ. ಶಿವಕುಮಾರ್ ಆಸೆಪಡುವುದರಲ್ಲಿ ತಪ್ಪಿಲ್ಲ” ಎಂದು ತಿಳಿಸಿದರು.
ಸಿದ್ದರಾಮಯ್ಯ ಬದಲಾದರೆ ಕಾಂಗ್ರೆಸ್ಗೆ ಸಂಕಷ್ಟ ಉಂಟಾಗಬಹುದೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಕಾಂಗ್ರೆಸ್ ಒಂದು ರಾಷ್ಟ್ರೀಯ ಪಕ್ಷ. ಈ ಬಗ್ಗೆ ಅಂತಿಮ ತೀರ್ಮಾನವನ್ನು ಹೈಕಮಾಂಡ್ ಕೈಗೊಳ್ಳುತ್ತದೆ” ಎಂದು ಹೇಳಿದರು.



