No menu items!
17.6 C
Munich
Friday, April 24, 2026

ಪತ್ರಿಕೋದ್ಯಮದ ತಪಸ್ವಿ ಪಿ. ರಾಮಯ್ಯ ವಿಧಿವಶ: ಗಣ್ಯರಿಂದ ಸಂತಾಪ

Must read

ಪತ್ರಿಕೋದ್ಯಮದ ತಪಸ್ವಿ ಪಿ. ರಾಮಯ್ಯ ವಿಧಿವಶ: ಗಣ್ಯರಿಂದ ಸಂತಾಪ

ಬೆಂಗಳೂರು: ಹಿರಿಯ ಪತ್ರಕರ್ತರು ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯರಾದ ಪಿ. ರಾಮಯ್ಯ (93) ಅವರು ಮಂಗಳವಾರ ರಾತ್ರಿ ನಿಧನರಾಗಿದ್ದಾರೆ. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ರಾತ್ರಿ 9 ಗಂಟೆ ಸುಮಾರಿಗೆ ಕೊನೆಯುಸಿರೆಳೆದರು ಎಂದು ಅವರ ಪುತ್ರ ಡಾ. ಬಾಲಜಿ ತಿಳಿಸಿದ್ದಾರೆ.

1933ರ ಸೆಪ್ಟೆಂಬರ್ 12ರಂದು ಜನಿಸಿದ ಪಿ. ರಾಮಯ್ಯ ಅವರು ಐದು ದಶಕಗಳ ಕಾಲ ‘ದಿ ಹಿಂದೂ’ ಪತ್ರಿಕೆಯಲ್ಲಿ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ ಪತ್ರಿಕಾ ಕ್ಷೇತ್ರದಲ್ಲಿ ಅಪಾರ ಗೌರವ ಪಡೆದಿದ್ದರು. ನಂತರ ವಿಧಾನ ಪರಿಷತ್ ಸದಸ್ಯರಾಗಿಯೂ ಸಾರ್ವಜನಿಕ ಜೀವನದಲ್ಲಿ ತಮ್ಮದೇ ಆದ ಗುರುತು ಮೂಡಿಸಿದ್ದರು.

ಅವರ ಅಗಲಿಕೆಗೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ಆದಿಚುಂಚನಗಿರಿ ಮಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಮಾಧ್ಯಮ ಅಕಾಡೆಮಿ ಪ್ರಶಸ್ತಿ ಹಾಗೂ ಕೆಂಪೇಗೌಡ ಪ್ರಶಸ್ತಿಗೆ ಪಾತ್ರರಾಗಿದ್ದ ರಾಮಯ್ಯ ಅವರು ಪತ್ರಿಕಾ ಅಕಾಡೆಮಿ ಹಾಗೂ ವಿವಿಧ ಪತ್ರಕರ್ತರ ಕಲ್ಯಾಣ ಸಮಿತಿಗಳ ಸದಸ್ಯರಾಗಿದ್ದರು.

ಅವರಿಗೆ ಇಬ್ಬರು ಪುತ್ರರು, ಒಬ್ಬ ಪುತ್ರಿ, ಸೊಸೆಯಂದಿರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗ ಇದ್ದಾರೆ. ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕಾಗಿ ಬುಧವಾರ ಬೆಳಗ್ಗೆ 9 ಗಂಟೆಯಿಂದ ಸದಾಶಿವನಗರದ 7ನೇ ಮೇನ್, 16ನೇ ಕ್ರಾಸ್ (ಮನೆ ಸಂಖ್ಯೆ 295/12/1) ನಿವಾಸದಲ್ಲಿ ಇಡಲಾಗುವುದು ಎಂದು ಅವರ ಸೋದರಳಿಯ ಹಾಗೂ ಬಾಹ್ಯಾಕಾಶ ಮತ್ತು ರಕ್ಷಣಾ ವಿಶ್ಲೇಷಕರಾದ ಗಿರೀಶ್ ಲಿಂಗಣ್ಣ ತಿಳಿಸಿದ್ದಾರೆ.

- Advertisement -spot_img

More articles

- Advertisement -spot_img

Latest article