SC-ST ಮೀಸಲಾತಿ ಹೆಚ್ಚಳದ ರಾಜ್ಯ ಸರ್ಕಾರದ ನಿರ್ಧಾರವು ಚಾರಿತ್ರಿಕವಾಗಿದೆ ಎಂದು ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ್ ಹೇಳಿದ್ದಾರೆ. ಈ ಸಂಬಂಧ ವಿಧಾನಸೌಧದಲ್ಲಿ ಮಾತನಾಡಿದ ಅವರು, ಮೀಸಲಾತಿ ಹೆಚ್ಚಳ ಮಾಡಬೇಕು ಎನ್ನುವುದು ಈ ಸಮುದಾಯಗಳ ಬಹುದಿನಗಳ ಬೇಡಿಕೆ ಆಗಿತ್ತು. ಇದಕ್ಕೆ ಸ್ಪಂದಿಸಿ ಮೀಸಲಾತಿಯನ್ನು ಹೆಚ್ಚಿಸಲಾಗಿದೆ. ಇದು ಅತ್ಯಂತ ಸ್ವಾಗತಾರ್ಹವಾಗಿದೆ ಎಂದರು. ನ್ಯಾಯಮೂರ್ತಿ ನಾಗಮೋಹನ್ ದಾಸ್ ಮತ್ತು ನ್ಯಾಯಮೂರ್ತಿ ಸುಭಾಷ್ ಆಡಿ ಅವರ ವರದಿಗಳ ಶಿಫಾರಸುಗಳಿಗೆ ಅನುಗುಣವಾಗಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಇದರಲ್ಲಿ ಸಮಾಜದ ದುರ್ಬಲ ವರ್ಗಗಳ ಸಬಲೀಕರಣ ಮತ್ತು ಸಾಮಾಜಿಕ ನ್ಯಾಯದ ಹಿತ ಆಡಗಿದೆ ಎಂದು ಅವರು ಹೇಳಿದ್ದಾರೆ. ಇತರೆ ಹಿಂದುಳಿದ ವರ್ಗಗಳ ಮೀಸಲಾತಿ ಪ್ರಮಾಣಕ್ಕೇನೂ ಇದರಿಂದ ಧಕ್ಕೆ ಆಗುವುದಿಲ್ಲ. ಸರ್ಕಾರವು ಸಮಾಜದ ಎಲ್ಲಾ ಸಮುದಾಯಗಳ ಏಳಿಗೆಗೂ ಬದ್ಧವಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.